ಉಡುಪಿ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯುವ ಸಂಸತ್ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಯುವ ಸಂಸತ್ ಸಭೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಸಂಸದೀಯ ವ್ಯವಸ್ಥೆಯ ಪರಿಚಯ ಪಡೆಯಲು ವಿದ್ಯಾರ್ಥಿಗಳಿಗೆ ಯುವ ಸಂಸತ್ ಉತ್ತಮ ವೇದಿಕೆಯಾಗಿದೆ ಎಂದರು. ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಿ, ಸೆ.16ರಿಂದ ತಾಲ್ಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆಗಳನ್ನು ಆರಂಭಿಸಬೇಕು. ಅಕ್ಟೋಬರ್ 10ರೊಳಗೆ ತಾಲ್ಲೂಕು ಮಟ್ಟದ ಸ್ಪರ್ಧೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉತ್ತಮ ವಾಕ್ಚಾತುರ್ಯ ಹಾಗೂ ಚರ್ಚಾ ಕೌಶಲ ಹೊಂದಿರುವ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಗೆ ಪ್ರೇರೇಪಿಸಬೇಕು ಎಂದರು.

ಜಿಲ್ಲಾ ಮಟ್ಟದ ಯುವ ಸಂಸತ್ನಲ್ಲಿ ಪ್ರತಿ ತಾಲ್ಲೂಕಿನಿಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಮಾಡಬೇಕು. ಸೆ.11ರಿಂದ 30ರೊಳಗೆ ಜಿಲ್ಲಾ ಮಟ್ಟದ ಯುವ ಸಂಸತ್ ಆಯೋಜಿಸಿ, ಅತ್ಯುತ್ತಮವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ತಲಾ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ರಾಜ್ಯ ಮಟ್ಟದ ಯುವ ಸಂಸತ್ಗೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಂವಿಧಾನ ದಿನವಾದ ನ.26ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಯುವ ಸಂಸತ್ ನಡೆಯಲಿದ್ದು, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾದ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮಗಳನ್ನು ಜಿಲ್ಲಾ ವಕೀಲರ ಸಂಘದ ಸಹಯೋಗದೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಉದಯ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡೂರು, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರ್ಗಳು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.


