ಉಡುಪಿ : ಉಡುಪಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಳೆದ ಮೂರು ದಿನಗಳಿಂದ ಮುಂದುವರಿದಿರುವ ಸರ್ವರ್ ಸಮಸ್ಯೆಯಿಂದ ನೋಂದಣಿ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ ಘಟನೆ ಶುಕ್ರವಾರ ನಡೆದಿದೆ. ಸಮಸ್ಯೆ ಕುರಿತು ಮಾಹಿತಿ ಪಡೆದ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಸ್ಥಿತಿಯ ಮಾಹಿತಿ ಪಡೆದರು. ಶುಕ್ರವಾರ ಬೆಳಗ್ಗೆಯಿಂದಲೇ ನೂರಾರು ಮಂದಿ ನೋಂದಣಿ ಕಾರ್ಯಕ್ಕಾಗಿ ಕಚೇರಿಗೆ ಆಗಮಿಸಿದ್ದರೂ, ಸರ್ವರ್ ದೋಷದ ಕಾರಣ ಸಂಜೆ 4.30 ರವರೆಗೆ ಒಂದೇ ಒಂದು ದಾಖಲೆಯೂ ನೋಂದಣಿಯಾಗದ ಪರಿಸ್ಥಿತಿ ನಿರ್ಮಾಣವಾಯಿತು. ದೂರದ ಊರುಗಳಿಂದ ಬಂದ ಸಾರ್ವಜನಿಕರು, ವಯೋವೃದ್ಧರು ಹಾಗೂ ಮಹಿಳೆಯರು ದಿನಪೂರ್ತಿ ಕಾಯುವಂತಾಯಿತು.

ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ ಅವರು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಆಯುಕ್ತ ಮಲ್ಲೈ ಮುಗಿಲನ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಸರ್ವರ್ ಸಮಸ್ಯೆಯನ್ನು ತುರ್ತಾಗಿ ಪರಿಹರಿಸುವಂತೆ ಮನವಿ ಮಾಡಿದರು. ಜೊತೆಗೆ, ಶುಕ್ರವಾರ ಬಾಕಿ ಉಳಿದಿರುವ ದಾಖಲೆಗಳ ನೋಂದಣಿಯನ್ನು ಅದೇ ದಿನ ರಾತ್ರಿ ಅಥವಾ ಅಗತ್ಯವಿದ್ದರೆ ಭಾನುವಾರ ವಿಶೇಷ ವ್ಯವಸ್ಥೆ ಮಾಡಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳಿಗೂ ಮಾಹಿತಿ ನೀಡಿದ ಶಾಸಕರು, ರಾಜ್ಯ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ತರುವ ನೋಂದಣಿ ಇಲಾಖೆಯಲ್ಲಿ ಪದೇ ಪದೇ ಸರ್ವರ್ ಸಮಸ್ಯೆ ಉಂಟಾಗುತ್ತಿರುವುದು ಸಾರ್ವಜನಿಕರ ಸೇವೆಗೆ ದೊಡ್ಡ ಅಡ್ಡಿಯಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಸುಗಮ ಸೇವೆ ಒದಗಿಸಬೇಕು. ರಾಜ್ಯಾದ್ಯಂತ ಸರ್ವರ್ ಸಮಸ್ಯೆ ಮರುಕಳಿಸದಂತೆ ಮುಂದಿನ ವಿಧಾನಸಭಾ ಅಧಿವೇಶನದಲ್ಲಿಯೂ ಈ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.


