ಉಡುಪಿ : ದೇಶದ ಸಮುದ್ರ ಗಡಿಯನ್ನು ಸುರಕ್ಷಿತವಾಗಿರಿಸುವಲ್ಲಿ ಹಾಗೂ ಕರಾವಳಿ ಪ್ರದೇಶದ ಆಂತರಿಕ ಭದ್ರತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಸ್ಥಳೀಯ ಮೀನುಗಾರರ ಸಹಕಾರ ಅತ್ಯಂತ ಮಹತ್ವದ್ದಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ (ಐಪಿಎಸ್) ಹೇಳಿದರು. ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಲ್ಲಿ ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಅಧೀನದ ಕರಾವಳಿ ಭದ್ರತಾ ತರಬೇತಿ ಸಂಸ್ಥೆ ವತಿಯಿಂದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮುದ್ರ ಮಾರ್ಗದ ಮೂಲಕ ನಡೆಯಬಹುದಾದ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವುದು, ಅನುಮಾನಾಸ್ಪದ ದೋಣಿಗಳ ಮೇಲೆ ನಿಗಾ ವಹಿಸುವುದು ಹಾಗೂ ನುಸುಳುಕೋರರು ದೇಶದೊಳಗೆ ಪ್ರವೇಶಿಸದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು ಕರಾವಳಿ ಕಾವಲು ಪೊಲೀಸ್ ಪಡೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸ್ಥಳೀಯ ಮೀನುಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮನ್ವಯದಿಂದ ಕೆಲಸ ಮಾಡಬೇಕು. ಸಮುದ್ರ ಅಥವಾ ಕರಾವಳಿ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುವ ದೋಣಿಗಳು ಅಥವಾ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಪರಿಶೀಲನೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಕರಾವಳಿ ಭದ್ರತೆ ಎಂಬುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ, ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ. ಅದರಲ್ಲೂ ಮೀನುಗಾರರು ಸಮುದ್ರದ ಪರಿಸ್ಥಿತಿಯನ್ನು ಹತ್ತಿರದಿಂದ ಅರಿತಿರುವುದರಿಂದ ಅವರ ಮಾಹಿತಿ ಮತ್ತು ಸಹಕಾರ ಭದ್ರತಾ ವ್ಯವಸ್ಥೆಗೆ ಹೆಚ್ಚಿನ ಬಲ ನೀಡಲಿದೆ ಎಂದು ಎಸ್ಪಿ ಹೇಳಿದರು. ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಕೆ.ಎಲ್. ಗಣೇಶ್, ಹೆಜಮಾಡಿ ಠಾಣೆ ಸಿಪಿಐ ರತ್ನಕುಮಾರ್, ಮೀಸಲು ಪಡೆಯ ಸಿಪಿಐ ಮೂರ್ತಿ ನಾಯ್ಕ, ಗುಪ್ತ ವಾರ್ತೆ ವಿಭಾಗದ ಸಿಪಿಐ ಸೀತಾರಾಮ ಹಾಗೂ ಮುಖ್ಯ ತರಬೇತುದಾರ ಆರ್.ಜಿ. ಬಿರಾದಾರ ಉಪಸ್ಥಿತರಿದ್ದರು. ಎಂಎಸ್ಐ ಶಶಿಧರ ಸ್ವಾಗತಿಸಿದರು. ಎಂಎಸ್ಐ ಭಾಸ್ಕರ್ ಶೆಟ್ಟಿಗಾರ್ ವಂದಿಸಿದರು.

ತರಬೇತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕಾರವಾರ, ಬೇಲೆಕೇರಿ, ಕುಮಟಾ ಹಾಗೂ ಹೊನ್ನಾವರ ಕರಾವಳಿ ಕಾವಲು ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಉಡುಪಿ ಜಿಲ್ಲೆಯ ಗಂಗೊಳ್ಳಿ, ಮಲ್ಪೆ, ಹೆಜಮಾಡಿ ಹಾಗೂ ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯೂ ತರಬೇತಿಯಲ್ಲಿ ಪಾಲ್ಗೊಂಡು ಕರಾವಳಿ ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ತರಬೇತಿ ಪಡೆದರು.


