ಉಡುಪಿ : ಉಡುಪಿ ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಪಕ್ಷದ ಬಡ ಹಿಂದೂ ಮಹಿಳಾ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಇಲ್ಲದಿರುವುದು ಇತ್ತೀಚಿನ ಘಟನೆಯಿಂದ ಬಹಿರಂಗವಾಗಿದೆ ಎಂದು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆರೋಪಿಸಿದ್ದಾರೆ. ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಸಂಧಾನದ ನೆಪದಲ್ಲಿ ಕಾಂಗ್ರೆಸ್ ಮುಖಂಡರ ಕಚೇರಿಗೆ ಕರೆಯಿಸಿಕೊಂಡು ಮಹಿಳಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದರು. ಈ ಘಟನೆ ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ, ವಿಶೇಷವಾಗಿ ಹಿಂದೂ ಮಹಿಳಾ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ಗೌರವ ಮತ್ತು ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು.

ಹಲ್ಲೆಯಲ್ಲಿ ಗಾಯಗೊಂಡ ಮಹಿಳೆಯರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ, ರಾಜಕೀಯ ಒತ್ತಡದ ಮೂಲಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸದಂತೆ ಒತ್ತಡ ಹೇರಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮಹಿಳೆಯರ ಸುರಕ್ಷತೆ ಕುರಿತು ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ಮುಖಂಡರು ಈ ಘಟನೆಯ ಬಗ್ಗೆ ಮೌನ ವಹಿಸಿರುವುದು ಆಶ್ಚರ್ಯಕರ ಎಂದು ಟೀಕಿಸಿದರು. ಈ ಹಿಂದೆಯೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಮಹಿಳಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣವೂ ಪಕ್ಷದ ಆಂತರಿಕ ಸ್ಥಿತಿಯನ್ನು ಬಿಂಬಿಸುತ್ತಿದೆ ಎಂದು ಅವರು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಇಂತಹ ಬೆಳವಣಿಗೆಗಳಿಂದ ಜಿಲ್ಲೆಯ ಜನತೆ ಅಸಮಾಧಾನಗೊಂಡಿದ್ದು, ಮಹಿಳಾ ವಿರೋಧಿ ಧೋರಣೆಗೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ನೀತಾ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


