ಉಡುಪಿ : ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಕಾಲೇಜಿನ ಐಕ್ಯೂಎಸಿ, ಸಮಾಜಶಾಸ್ತ್ರ ವಿಭಾಗ ಮತ್ತು ಮಹಿಳಾ ಘಟಕದ ಸಂಯುಕ್ತ ಆಶ್ರಯದಲ್ಲಿ ಉದ್ಘಾಟನಾ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು ಸಹ ಪ್ರಾಧ್ಯಾಪಕಿ ಡಾ. ಸುಚಿತ್ರಾ ಎಸ್.ಆರ್. ಅವರು, ಪ್ರಚಲಿತ ಸಮಾಜದಲ್ಲಿ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಅತ್ಯಗತ್ಯವೆಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಅವರು, ಆಧುನಿಕ ಜೀವನಶೈಲಿ, ಆಹಾರ ಪದ್ಧತಿಗಳ ಬದಲಾವಣೆ ಮತ್ತು ಪರಿಸರ ಮಾಲಿನ್ಯವು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.

ಸಮಾಜಶಾಸ್ತ್ರ ಪ್ರಾಧ್ಯಾಪಕಿ ಡಾ. ಸುನೀತ ವಿ. ಅವರು ವಿಶ್ವ ಆರೋಗ್ಯ ದಿನದ ಪ್ರಸ್ತುತತೆಯನ್ನು ವಿವರಿಸಿದರು. ಇತಿಹಾಸ ಉಪನ್ಯಾಸಕಿ ಡಾ. ರಶ್ಮಿ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಜಾತ ವಂದನಾರ್ಪಣೆ ಮಾಡಿದರು. ಮಹಿಳಾ ಘಟಕದ ವಿದ್ಯಾರ್ಥಿ ಪ್ರತಿನಿಧಿ ಕು. ಭೂಮಿಕ (ತೃತೀಯ ಬಿ.ಸಿ.ಎ) ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಚಾಲಕ ಡಾ. ಸುಬ್ರಮಣ್ಯ, ವಿದ್ಯಾರ್ಥಿ ಪ್ರತಿನಿಧಿ ಕು. ರಕ್ಷಿತಾ (ತೃತೀಯ ಬಿ.ಎ) ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.



