ಉಡುಪಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕರಣ ಸಂವಿಧಾನಬದ್ಧವಾಗಿದ್ದು, ಕೊನೆಗೂ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರಿಗೆ ನ್ಯಾಯಾಲಯದ ಮೂಲಕ ನ್ಯಾಯ ದೊರೆತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮತ ಎಣಿಕೆ ಅಧಿಕಾರಿಗಳು ನ್ಯಾಯಾಲಯದ ಆದೇಶದಂತೆ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಕಾಂಗ್ರೆಸ್ ಆರೋಪಿಸುವ ರೀತಿಯ ಯಾವುದೇ ಗೊಂದಲ ನಡೆದಿರುವ ಸಾಧ್ಯತೆ ಇಲ್ಲ ಎಂದು ಹೇಳಿದರು.

ನ್ಯಾಯಾಲಯದ ಆದೇಶ ಪಾಲಿಸುವುದು ವಿಧಾನಸಭಾಧ್ಯಕ್ಷರ ಕರ್ತವ್ಯ. ಘನತೆವೆತ್ತ ರಾಜ್ಯಪಾಲರ ಪ್ರವೇಶದ ಬಳಿಕವಾದರೂ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಹೊಸ ಶಾಸಕರಾಗಿ ಜೀವರಾಜ್ ಉಳಿದಿರುವ ಅವಧಿಯಲ್ಲಿ ತಮ್ಮ ಆಡಳಿತಾತ್ಮಕ ಅನುಭವದ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಕೋಟ ಶ್ರೀನಿವಾಸ ಪೂಜಾರಿ ಶುಭ ಹಾರೈಸಿದರು.



