ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಶೂಟ್ಔಟ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಉತ್ತರಾಖಂಡ ಮೂಲದ ಅಜಯ್ರಸ್ತೋಗಿ ಅಲಿಯಾಸ್ಅ ನುಮೋಲ್ನನ್ನು ಕುಮಟಾದಲ್ಲಿ ಬಂಧಿಸಲಾಗಿದ್ದು, ಜಿಯಾವುಲ್ವಜೂಲ್ಶೇಕ್ಅಲಿಯಾಸ್ದೀಪಕ್ನನ್ನು ಭಟ್ಕಳದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ಭಟ್ಕಳದತ್ತ ಬಸ್ಸಿನಲ್ಲಿ ಪರಾರಿಯಾಗುತ್ತಿದ್ದರೆನ್ನಲಾಗಿದೆ. ಪೊಲೀಸರು ಬಸ್ಸನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳು ಇಳಿದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನೂ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶ ಮೂಲದ ಶೂಟರ್ ರಾಜುನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾರ್ಯಾಚರಣೆ ವೇಳೆ ಆತನ ಬಲಗಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ರಾಜು ಉಡುಪಿಯ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿಯನ್ನು ಬಂಧಿಸುವ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಡೇವಿಡ್ ಡಿಸೋಜಾ ನಡೆಸುತ್ತಿದ್ದ ಕಾಮಗಾರಿಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರವೇ ಹತ್ಯೆಯ ಪ್ರಮುಖ ಕಾರಣವಾಗಿರಬಹುದು ಎಂಬ ಶಂಕೆ ಪೊಲೀಸರ ತನಿಖೆಯಲ್ಲಿ ವ್ಯಕ್ತವಾಗಿದೆ. ಅನ್ಯರಾಜ್ಯದ ಕಂಪನಿಯೊಂದಿಗಿನ ಹಣಕಾಸಿನ ವಿಚಾರದಲ್ಲಿ ಡೇವಿಡ್ ಡಿಸೋಜಾ ಅವರಿಗೆ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದ್ದು, ಇದೇ ವಿಚಾರ ಕೊಲೆಗೆ ಕಾರಣವಾಗಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮೂವರು ಆರೋಪಿಗಳ ಬಂಧನದ ಬಳಿಕ ಇದೀಗ ತನಿಖೆಯ ಪ್ರಮುಖ ಕೊಂಡಿ ಸುಫಾರಿ ನೀಡಿದವರು ಯಾರು? ಎಂಬುದರತ್ತ ತಿರುಗಿದೆ. ಹತ್ಯೆಗೆ ಹಣ ನೀಡಿದವರು ಹಾಗೂ ಕೃತ್ಯಕ್ಕೆ ಸಂಚು ರೂಪಿಸಿದವರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅಲ್ಲದೆ, ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಆಶ್ರಯ ನೀಡಿದವರು ಯಾರು, ಕೃತ್ಯದ ಬಳಿಕ ಅವರಿಗೆ ಯಾರು ನೆರವು ನೀಡಿದರು ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಹಿಂದೆ ಇರುವ ಸಂಪೂರ್ಣ ಜಾಲವನ್ನು ಬಯಲಿಗೆಳೆಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


