ಉಡುಪಿ: ನಿಟ್ಟೂರು ಪ್ರೌಢಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಶಾಲೆಗೆ ಹೊಸದಾಗಿ ಸೇರ್ಪಡೆಯಾದ 8ನೇ ತರಗತಿ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯ ರಾಮದಾಸ್ ನಾಯ್ಕ್ ಹಾಗೂ ಶಿಕ್ಷಕ ವೃಂದವು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿತು.

ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಶಿಕ್ಷಕರು, ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

ಕರಂಬಳ್ಳಿ ವಾರ್ಡ್ನ ಕೌನ್ಸಿಲರ್ ಗಿರಿಧರ್ ಆಚಾರ್ಯ, ಮಾಜಿ ಸದಸ್ಯೆ ಗೀತಾ ಶೇರಿಗಾರ್ ಹಾಗೂ ಸದಸ್ಯರಾದ ಕಿಶೋರ್ ಕುಮಾರ್, ಪ್ರತ್ವಿರಾಜ್ ಮತ್ತು ಗೋಪಾಲ ಪೂಜಾರಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದು, ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಹರ್ಷದಿಂದ ಸ್ವಾಗತಿಸಿದರು.



