ಕೋಟ: ಬಾರ್ನಲ್ಲಿ ಪಾರ್ಟಿ ಮುಗಿಸಿ ಬಿರಿಯಾನಿ ಪಾರ್ಸೆಲ್ ತಂದು ಊಟ ಮಾಡುವಾಗ ಜಗಳ ಉಂಟಾಗಿ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಪಡುಕೆರೆ ಸೆಲೂನ್ ಬಳಿ ಭಾನುವಾರ ಸಂಜೆ ನಡೆದಿದೆ. ಸಂತೋಷ್ ಪೂಜಾರಿ(30) ಮೃತಪಟ್ಟ ಯುವಕ.

ಪೊಲೀಸ್ ಮಾಹಿತಿಯಂತೆ ಡಿ.14ರ ಸಂಜೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಹಾಗೂ ದರ್ಶನ್ ಬಾರ್ನಲ್ಲಿ ಪಾರ್ಟಿ ಮುಗಿಸಿ ತಾವು ಮಾಮೂಲಿಯಾಗಿ ಸೇರುವ ಪಡುಕೆರೆ ಜಾಗಕ್ಕೆ ಬಂದು ಊಟ ಮಾಡಿಕೊಂಡು ಮಾತನಾಡುತ್ತಿದ್ದರು.

ಈ ವೇಳೆ ಸಂತೋಷ್ ಅವರ ಕುಟುಂಬ ವಿಚಾರ ಹಾಗೂ ಕುಡಿತದ ವಿಷಯದಲ್ಲಿ ದರ್ಶನ್, ಕೌಶಿಕ್, ಅಂಕಿತ ಹಾಗೂ ಸುಜನ್ ನಡುವೆ ಮಾತಿನ ಚಕಮಕಿ ಉಂಟಾಗಿ, ಅವಾಚ್ಯ ಪದ ಬಳಸಿ ಜಗಳ ತಾರಕಕ್ಕೇರಿದೆ ಎನ್ನಲಾಗಿದೆ. ಜಗಳದ ವೇಳೆ ನಾಲ್ವರು ಸೇರಿ ಸಂತೋಷ್ ಮೇಲೆ ಹಲ್ಲೆ ನಡೆಸಿದ್ದಾರೆ.

ದರ್ಶನ್ ಸಂತೋಷ್ ಅವರ ಕುತ್ತಿಗೆಯ ಹಿಂಭಾಗಕ್ಕೆ ಕೈಯಿಂದ ಬಲವಾಗಿ ಹೊಡೆದಿದ್ದು, ಕೌಶಿಕ್ ಕೂಡ ಕೈಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ರಜತ್ ಎನ್ನುವವರು ಮಧ್ಯಪ್ರವೇಶಿಸಿ ಜಗಳ ತಡೆಯಲು ಯತ್ನಿಸಿದರೂ, ಹಲ್ಲೆಯಿಂದ ಸಂತೋಷ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಂತೋಷ್ ಅವರ ಬಾಯಿಯಿಂದ ನೊರೆ ಬರುತ್ತಿದ್ದು ಮಾತನಾಡದ ಸ್ಥಿತಿಯಲ್ಲಿ ಇದ್ದ ಹಿನ್ನೆಲೆಯಲ್ಲಿ, ರಚತ್, ಸಚಿನ್, ಚೇತನ್ ಹಾಗೂ ಪ್ರಕಾಶ್ ಸಹಾಯದಿಂದ ಅವರನ್ನು ಕಾರಿನಲ್ಲಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ಕರೆದೊಯ್ಯಿದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿ, ಸಂತೋಷ್ ಈಗಾಗಲೇ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.

ಈ ಕುರಿತು ಕೋಟ ಪೊಲೀಸ್ ರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸ್ ರು ಈ ಪ್ರಕರಣಕ್ಕೆ ಸಂಭಂದಪಟ್ಟಂತೆ ದರ್ಶನ್ (21), ಕೌಶಿಕ್ (21), ಅಂಕಿತ (19), ಸುಜನ್ (21) ಅವರನ್ನು ಬಂಧಿಸಿದ್ದಾರೆ.

ಈ ಕುರಿತು ರಜತ್ ಅವರು ನೀಡಿದ ದೂರಿನ ಮೇರೆಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಬಂಧಿಸಿದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆ ಮುಂದುವರಿಸಿದ್ದಾರೆ.



