ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್ ಘಟನೆ ನಡೆದಿದ್ದು, ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿಸೋಜಾ ಅವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಶಿರ್ವ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯು ಜಿಲ್ಲೆಯಾದ್ಯಂತ ಆತಂಕ ಮೂಡಿಸಿದೆ. ಗುಂಡಿನ ದಾಳಿಯ ಬಳಿಕ ಡೇವಿಡ್ ಅವರನ್ನು ತಕ್ಷಣ ಶಿರ್ವದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ವೈದ್ಯರು ದೇಹದಲ್ಲಿದ್ದ ಗುಂಡನ್ನು ಹೊರತೆಗೆದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ.

ಡೇವಿಡ್ ಡಿಸೋಜಾ ಅವರು ಶಿರ್ವ ಪ್ರದೇಶದಲ್ಲಿ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದಲ್ಲದೆ, ಬಸ್ ಉದ್ಯಮ ಸೇರಿದಂತೆ ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಶೂಟೌಟ್ಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ವೈಯಕ್ತಿಕ ದ್ವೇಷ, ಹಳೆಯ ವೈಮನಸ್ಸು ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಡೇವಿಡ್ ಡಿಸೋಜಾ ಅವರು ಈ ಹಿಂದೆ ಶಿರ್ವ ಚರ್ಚಿನ ಧರ್ಮಗುರು ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತರಾಗಿದ್ದು, ಹಲವು ವಿವಾದಗಳಿಂದ ಸುದ್ದಿಯಾಗಿದ್ದರು. ಆದರೆ, ಈ ಹಿಂದಿನ ಪ್ರಕರಣಗಳಿಗೆ ಮತ್ತು ಇಂದಿನ ಗುಂಡಿನ ದಾಳಿಗೆ ಸಂಬಂಧವಿದೆಯೇ ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗಬೇಕಿದೆ.


