ಉಡುಪಿ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಯಲ್ಲಿರುವ ಟ್ಯಾಕ್ಸಿ ಪಾರ್ಕಿಂಗ್ ನೀತಿಯನ್ನು ಮರುಪರಿಶೀಲಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿಮಾನ ನಿಲ್ದಾಣದ ಟ್ಯಾಕ್ಸಿ ಪಾರ್ಕಿಂಗ್ ವ್ಯವಸ್ಥೆ ಹಾಗೂ ಟ್ಯಾಕ್ಸಿ ಚಾಲಕರ ಬೇಡಿಕೆಗಳ ಕುರಿತು ಅದಾನಿ ಏರ್ಪೋರ್ಟ್ ಆಡಳಿತದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿರುವ ಸಂಸದರು, ಟ್ಯಾಕ್ಸಿ ಚಾಲಕರ ಸಮಸ್ಯೆಗಳನ್ನು ಮಾನವೀಯ ದೃಷ್ಟಿಯಿಂದ ಪರಿಶೀಲಿಸಿ ಶೀಘ್ರ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.

ಜುಲೈ 14ರಂದು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ಖಾಸಗಿ ವಾಹನಗಳಿಗೆ ನೀಡಲಾಗುತ್ತಿರುವಂತೆ ಟ್ಯಾಕ್ಸಿ ವಾಹನಗಳಿಗೂ ಕನಿಷ್ಠ 10 ನಿಮಿಷಗಳ ಉಚಿತ ಪ್ರವೇಶಾವಕಾಶ ಕಲ್ಪಿಸಬೇಕು. ಟ್ಯಾಕ್ಸಿ ವಾಹನಗಳ ವಿರುದ್ಧ ಜಾರಿಯಲ್ಲಿರುವ ತಾರತಮ್ಯದ ನಿಯಮಗಳನ್ನು ರದ್ದುಪಡಿಸಿ ಸಮಾನ ಪಾರ್ಕಿಂಗ್ ನೀತಿ ಜಾರಿಗೆ ತರಬೇಕು. ಅಲ್ಲದೆ ಟ್ಯಾಕ್ಸಿ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿ ಶಾಶ್ವತ ಹಾಗೂ ಪರಸ್ಪರ ಒಪ್ಪಿಗೆಯ ಪರಿಹಾರ ಕಂಡುಕೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಸಾವಿರಾರು ಟ್ಯಾಕ್ಸಿ ಚಾಲಕರ ಜೀವನೋಪಾಯ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.


