ಉಡುಪಿ: ಮಹಿಳಾ ಪರ ಚಿಂತನೆಗಳು ಕೇವಲ ಪಾಶ್ಚಿಮಾತ್ಯ ರಾಷ್ಟ್ರಗಳ ಕಲ್ಪನೆಯಲ್ಲ; ಭಾರತೀಯ ತಾತ್ವಿಕ ಚಿಂತನೆಗಳಲ್ಲಿಯೂ ಮಹಿಳಾ ಪರ ಹೋರಾಟದ ಧ್ವನಿಗಳು ಕಾಣಿಸಿಕೊಳ್ಳುತ್ತವೆ. ನಮ್ಮ ದೇಶದ ಪುರಾಣ ಮತ್ತು ಇತಿಹಾಸಗಳನ್ನು ವಾಸ್ತವಿಕ ದೃಷ್ಟಿಕೋನದಿಂದ ವಿಶ್ಲೇಷಿಸಿದರೆ ಇದನ್ನು ಸ್ಪಷ್ಟವಾಗಿ ಕಾಣಬಹುದು ಎಂದು ಚಿಂತಕಿ ಹಾಗೂ ಲೇಖಕಿ ಬಿ.ಎಂ. ರೋಹಿಣಿ ಹೇಳಿದರು.

ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳಾ ದಿನಾಚರಣಾ ಸಪ್ತಾಹ–2026ರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ಸಭಾಪತಿ ಬಸರೂರು ರಾಜೀವ ಶೆಟ್ಟಿ, ಒಂದೂವರೆ ಶತಮಾನದಿಂದಲೇ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಹಿಳಾ ಸಮಾನತೆಯನ್ನು ಪ್ರತಿಪಾದಿಸುತ್ತಿದ್ದು, ಡಾ. ಶಿವರಾಮ ಕಾರಂತರ ದೃಷ್ಟಿಕೋನ ಇದಕ್ಕೆ ಪೂರಕವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸೋಜನ್ ಕೆ.ಜಿ ವಹಿಸಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಆಶಯ ಭಾಷಣ ಮಾಡಿದರು. ವಿದ್ಯಾರ್ಥಿನಿ ದಿಶಾ ಪ್ರಾರ್ಥಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ಬಿ.ಎಂ. ರೋಹಿಣಿ ‘ಕಾರಂತರ ಮಹಿಳಾ ಪರ ಚಿಂತನೆಗಳು’ ಮತ್ತು ಪ್ರೊ. ದಿವ್ಯರಾಣಿ ಪ್ರದೀಪ್ ‘ಮಹಿಳಾ ಸಬಲೀಕರಣದ ಸವಾಲುಗಳು’ ವಿಷಯಗಳ ಕುರಿತು ಉಪನ್ಯಾಸ ನೀಡಿದರು.

ಕಾಲೇಜಿನ ಮಹಿಳಾ ಸಂಘದ ಸಂಚಾಲಕಿ ವಿದ್ಯಾ ಡಿ. ಸನ್ಮಾನ ಪತ್ರ ವಾಚಿಸಿದರು. ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದ ಸ್ಥಾಪಕಾಧ್ಯಕ್ಷೆ ವಸಂತಿ ಶೆಟ್ಟಿ, ಬ್ರಹ್ಮಾವರ ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ., ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ರಮಾದೇವಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಉಪನ್ಯಾಸಕಿ ತ್ರಿವೇಣಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಡಾ. ನಿಕೇತನ ವಂದಿಸಿದರು.



