ಬೆಂಗಳೂರು : ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅತೃಪ್ತರಾಗಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ನೀಡಿದ್ದು, ರಾಜೀನಾಮೆ ಸಲ್ಲಿಸುವವರನ್ನು ತಡೆಯುವುದಿಲ್ಲ. ರಾಜೀನಾಮೆ ನೀಡಿದರೆ ಕ್ಷಣದಲ್ಲೇ ಅಂಗೀಕರಿಸುತ್ತೇನೆ ಎಂದು ಹೇಳಿದ್ದಾರೆ.
ಮಂಗಳವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಇಂತಹ ಬೆಳವಣಿಗೆಗಳು ಸಾಮಾನ್ಯ. ಈ ಹಿಂದೆ ತಮಗೂ ಹಾಗೂ ಡಾ. ಜಿ. ಪರಮೇಶ್ವರ್ ಅವರಿಗೂ ಸಚಿವ ಸ್ಥಾನ ಸಿಗದ ಸಂದರ್ಭಗಳಿದ್ದರೂ ತಾಳ್ಮೆಯಿಂದ ಪಕ್ಷದೊಂದಿಗೆ ಉಳಿದಿದ್ದೇವೆ. ರಾಜಕೀಯ ಭವಿಷ್ಯಕ್ಕಾಗಿ ಪಕ್ಷವೇ ಮುಖ್ಯ ಎಂದು ಹೇಳಿದರು.

ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಎಸ್. ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಬಳಿಕ ಅವರು ಮುಖ್ಯಮಂತ್ರಿಯಾದರು. ಧರಂಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಇದೇ ರೀತಿಯ ಸಂದರ್ಭ ಎದುರಾಗಿತ್ತು ಎಂದು ಉದಾಹರಣೆ ನೀಡಿದ ಅವರು, ಅತೃಪ್ತ ಶಾಸಕರು ಸಹ ತಾಳ್ಮೆ ವಹಿಸಬೇಕು ಎಂದು ಸಲಹೆ ನೀಡಿದರು.
ನಿಗಮ-ಮಂಡಳಿಗಳ ಅಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳಲ್ಲಿರುವವರು ರಾಜೀನಾಮೆ ನೀಡುವಂತೆ ಸೂಚಿಸಲಾಗುವುದು. ಎಲ್ಲರಿಗೂ ಎರಡುವರೆ ವರ್ಷದ ಅವಧಿ ಎಂಬುದನ್ನು ಮೊದಲೇ ತಿಳಿಸಲಾಗಿತ್ತು. ಮೊದಲು ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಬಳಿಕ ಶಾಸಕರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದ ನೂತನ ಸಚಿವರು ತಮಗೆ ಜವಾಬ್ದಾರಿ ನೀಡಿರುವ ಜಿಲ್ಲೆಗಳಿಗೆ ತಕ್ಷಣ ಭೇಟಿ ನೀಡಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಸ್ಥಳ ಪರಿಶೀಲನೆಗೆ ಅಗತ್ಯ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.


