ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳು ಜನಮನ್ನಣೆ ಪಡೆದಿರುವ ಸಂದರ್ಭದಲ್ಲಿ, ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಗೆ ತರಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ನೀರೆ ಕೃಷ್ಣ ಶೆಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನೀರೆ ಕೃಷ್ಣ ಶೆಟ್ಟಿ ಅವರು ನೀಡಿದ ಮಾಹಿತಿಯ ಪ್ರಕಾರ, ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್ ಸೇರಿದಂತೆ ಹಲವಾರು ಗ್ಯಾರಂಟಿಗಳಿಂದ ಮಹಿಳೆಯರು ಹಾಗೂ ಸಾಮಾನ್ಯ ಜನ ಸಂತೃಪ್ತರಾಗಿದ್ದಾರೆ. ರಾಜ್ಯವು ತಲಾ ವರಮಾನದಲ್ಲಿ ದೇಶದ ಮುಂಚೂಣಿಯಲ್ಲಿದ್ದರೂ, ಮದ್ಯದ ಅತಿಸೇವನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ಕಷ್ಟಪಟ್ಟು ದುಡಿಯುವವರು ಹಾಗೂ ಕೆಲವು ವಿದ್ಯಾರ್ಥಿಗಳು ಕೂಡ ಕುಡಿತದ ಚಟದಿಂದ ಆರೋಗ್ಯ ಕಳೆದುಕೊಳ್ಳುತ್ತಿರುವುದನ್ನು ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಮದ್ಯ ನಿಷೇಧ ಜಾರಿಯಾದರೆ ಮಹಿಳೆಯರು ಮತ್ತು ಬಡ ವರ್ಗದವರಿಗೆ ಮಹತ್ತರ ನಿರಾಳತೆ ಸಿಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಬಿಹಾರದಲ್ಲಿ ಮದ್ಯ ನಿಷೇಧವು ಮಹಿಳೆಯರ ವಿಶ್ವಾಸವನ್ನು ಗೆದ್ದು ಸರ್ಕಾರ ಪುನಃ ಅಧಿಕಾರಕ್ಕೆ ಬರಲು ನೆರವಾಯಿತು ಎಂಬ ಉದಾಹರಣೆಯನ್ನು ಅವರು ಉಲ್ಲೇಖಿಸಿದ್ದಾರೆ. ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅಳವಡಿಸಬೇಕೆಂದು ಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ.

ಮುಂದಿನ ರಾಜ್ಯ ಬಜೆಟ್ನಲ್ಲಿ ಮದ್ಯ ನಿಷೇಧ ಘೋಷಣೆ ಮಾಡಲು ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿರುವ ಅವರು, ಮದ್ಯ ನಿಷೇಧದಿಂದ ಪರಿಣಾಮವುಂಟಾಗುವ ಅಬಕಾರಿ ಇಲಾಖೆ ಹಾಗೂ ಮದ್ಯಮಾರಾಟ ಮಂಡಳಿಯ ನೌಕರರಿಗೆ ಪರ್ಯಾಯ ಉದ್ಯೋಗ ಒದಗಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ತಿಳಿಸಿದ್ದಾರೆ.



