ಉಡುಪಿ: ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಇತರರಂತೆ ಸಮಾನವಾಗಿ ಬದುಕಿ ಮುಂದಕ್ಕೆ ಬರಲು ಪ್ರತಿಯೊಬ್ಬರೂ ಪ್ರೋತ್ಸಾಹಿಸಿ ಅಗತ್ಯವಾದ ಅವಕಾಶಗಳನ್ನು ಒದಗಿಸಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ನಗರದ ಶ್ರೀ ಆರೂರು ಲಕ್ಷ್ಮೀನಾರಾಯಣ ರಾವ್ ಸ್ಮಾರಕ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ಹಲವು ಸರ್ಕಾರಿ ಇಲಾಖೆ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ 20 ವಿಕಲಚೇತನ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಅವರಲ್ಲಿ ಕಲಿಸುವ ಶಿಕ್ಷಕರು ಅಭಿನಂದನೆಗೆ ಅರ್ಹರು ಎಂದು ಅವರು ಪ್ರಶಂಸಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ವಿಶೇಷ ಚೇತನರ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಕೆಲಸ ನಡೆಯುತ್ತಿದೆ ಎಂದರು. ಸುಗಮ್ಯ ಭಾರತ ಅಭಿಯಾನದಡಿ ಸಾರಿಗೆ, ಕಟ್ಟಡಗಳು ಹಾಗೂ ಸರಕಾರಿ ಕಛೇರಿಗಳನ್ನು ವಿಶೇಷ ಚೇತನರಿಗೆ ಅನುಗುಣವಾಗಿಸುವ ಕೆಲಸ ಮುಂದುವರಿದಿದೆ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ವಿಶೇಷ ಚೇತನರಾದ ಪ್ರೀತಿ, ಪ್ರಥಮ್ ಜೋಶಿ, ಚಿರಾಗ್ ಪೈ, ಸಾಯಿದೀಪ್ ಶೆಟ್ಟಿ, ನಿರಂಜನ್ ಭಟ್ ಮುನ್ನೂರು, ಮಕ್ಬುಲ್ ಶೇಕ್, ಜಿ. ಸುರೇಶ್ ಆಚಾರ್ ಮತ್ತು ಉಮೇಶ್ ಕುಂದರ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ಆರೋಗ್ಯ ಇಲಾಖೆಯ ವತಿಯಿಂದ ವೈದ್ಯಕೀಯ ತಪಾಸಣೆ ನಡೆಯಿತು. ವಿಶೇಷ ಶಾಲಾ ಮಕ್ಕಳು ಹಾಗೂ ವಿಕಲಚೇತನರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಕಾರ್ಯಕ್ರಮ ಸೊಬಗು ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ., ಶಾಸಕ ಕಿರಣ್ ಕುಮಾರ್ ಕೊಡ್ಗಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಕುಂದಾಪುರ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ, ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಕಾರ್ಯದರ್ಶಿ ಗಣನಾಥ ಶೆಟ್ಟಿ ನಿರೂಪಣೆ ಮಾಡಿದರು.



