ಉಡುಪಿ: ಕುಂದಾಪುರ ತಾಲೂಕು ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಹಳೆಯ ಶಿಥಿಲ ಕಟ್ಟಡವನ್ನು ತೆರವುಗೊಳಿಸಿ, ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರು ಮಾಡುವಂತೆ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕರು, ಕುಂದಾಪುರ ತಾಲೂಕು ಆಸ್ಪತ್ರೆಯ ಹಳೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳ ಸುರಕ್ಷತೆಗೆ ಅಪಾಯಕಾರಿಯಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗಮನಕ್ಕೆ ತಂದರು.

ಹೀಗಾಗಿ ಹಳೆಯ ಕಟ್ಟಡವನ್ನು ತೆರವುಗೊಳಿಸಿ, ಸಾರ್ವಜನಿಕರ ಆರೋಗ್ಯ ಸೇವೆಗೆ ಅನುಕೂಲವಾಗುವಂತೆ ಕೂಡಲೇ ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಸಚಿವರನ್ನು ಒತ್ತಾಯಿಸಿದರು. ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯು.ಟಿ. ಖಾದರ್, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.


