ಉಡುಪಿ : ಕಸ್ತೂರಿರಂಗನ್ ವರದಿಯಿಂದ ಜಿಲ್ಲೆಯ ಗ್ರಾಮಗಳಿಗೆ ಎದುರಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ.18ರಂದು ಹೆಬ್ರಿಗೆ ಭೇಟಿ ನೀಡಲಿದ್ದಾರೆ. ಹೆಬ್ರಿಯ ಪದವಿ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಪಾಲ್ಗೊಂಡು, ಕಸ್ತೂರಿರಂಗನ್ ವರದಿ ಜಾರಿಯಿಂದ ಜಿಲ್ಲೆಯ 35 ಗ್ರಾಮಗಳಿಗೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು ರೈತರು, ಬುಡಕಟ್ಟು ಜನರು, ಅರಣ್ಯವಾಸಿಗಳು ಸೇರಿದಂತೆ ಸ್ಥಳೀಯರಿಂದ ನೇರವಾಗಿ ಮಾಹಿತಿ ಪಡೆಯಲಿದ್ದಾರೆ.

ಮುಖ್ಯಮಂತ್ರಿಗಳ ಹೆಬ್ರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳುವುದರ ಜತೆಗೆ ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸಂಪರ್ಕ ರಸ್ತೆಗಳಲ್ಲಿ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದರು.

ಸಭೆಗೆ ಆಗಮಿಸುವ ಸಾರ್ವಜನಿಕರಿಗೆ ಸಮರ್ಪಕ ಆಸನ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಂಬುಲೆನ್ಸ್ ಸಿದ್ಧವಾಗಿರಬೇಕು. ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ಸನ್ನದ್ಧವಾಗಿಡಬೇಕು ಎಂದು ಸೂಚಿಸಿದರು. ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಗಳ ಸಭೆಗೆ ಕಸ್ತೂರಿರಂಗನ್ ವರದಿ ಜಾರಿಯಿಂದ ಸಮಸ್ಯೆ ಎದುರಿಸಬಹುದಾದ ರೈತರು, ಬುಡಕಟ್ಟು ಸಮುದಾಯದವರು, ಅರಣ್ಯವಾಸಿಗಳು ಹಾಗೂ ಇತರ ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಪಿ., ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರರು ಉಪಸ್ಥಿತರಿದ್ದರು.


