ಉಡುಪಿ : ತಾಲೂಕಿನ ಹೆಗ್ಗುಂಜೆ ಗ್ರಾಮದ ನೀರ್ ಜೆಡ್ಡು ಪ್ರದೇಶದ ಸರ್ಕಾರಿ ಜಾಗದಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳನ್ನು ಸೋಮವಾರ ಬೆಳಿಗ್ಗೆ ಬ್ರಹ್ಮಾವರ ತಹಶೀಲ್ದಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯದ ಆದೇಶ ಹಾಗೂ ಲೋಕಾಯುಕ್ತ ನಿರ್ದೇಶನದಂತೆ, ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಮತ್ತು ವಾಸವಿಲ್ಲದ ಐದು ಶೆಡ್ಗಳನ್ನು ತೆರವು ಮಾಡಲಾಗಿದೆ ಎಂದು ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ತಿಳಿಸಿದ್ದಾರೆ.

ವಿಜಯ ಚೌಟ ಅವರು ಸರ್ಕಾರಿ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿ ಕಟ್ಟಡ ನಿರ್ಮಿಸಿರುವ ಕುರಿತು ಮಂದಾರ್ತಿಯ ವಿಜಯಲಕ್ಷ್ಮೀ ಹೆಬ್ಬಾಡಿ ಅವರು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ವಿಶೇಷ ನ್ಯಾಯಾಲಯದ ವಿಚಾರಣೆಯ ಬಳಿಕ ಅಕ್ರಮ ತೆರವಿಗೆ ಆದೇಶ ನೀಡಲಾಗಿತ್ತು.




ಸ್ಥಳೀಯ ದೂರುಗಳ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸುವಂತೆ ನೋಟಿಸ್ ನೀಡಿದರೂ ನಿರ್ಲಕ್ಷ್ಯ ವಹಿಸಿದ್ದರಿಂದ ಅಂತಿಮವಾಗಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ವೇಳೆ ಅಡ್ಡಿಪಡಿಸಿದ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.



