ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲೀಸ್ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಉಡುಪಿಯಿಂದ ಬೆಂಗಳೂರು ವಿಧಾನಸೌಧದ ವರೆಗೆ ಆಯೋಜಿಸಿದ ಬೈಕ್ ರ್ಯಾಲಿಗೆ ಶಾಸಕ ಯಶ್ ಪಾಲ್ ಎ ಸುವರ್ಣ ಇಂದು ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವವು ಸರ್ಕಾರದ ಒಂದು ರೂಪವಾಗಿದ್ದು, ಇದರ ಆಶಯಗಳ ರಕ್ಷಣೆ ಆದರ್ಶಗಳನ್ನು ಪಾಲನೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವ ತತ್ವಗಳು ಜಾಗೃತಿಗೊಳಿಸಿ ಅದರ ಮಹತ್ವಗಳನ್ನು ಸಾರುವ ಸಲುವಾಗಿ ಈ ಬಾರಿ ನನ್ನ ಮತ ನನ್ನ ಹಕ್ಕು ಎಂಬ ಘೋಷಣೆಯೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರ ಉದ್ದೇಶ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವುದಾಗಿದೆ ಎಂದ ಅವರು, ಇಂದು ನಡೆಯುತ್ತಿರುವ ಜಾಗೃತಿ ಬೈಕ್ ರ್ಯಾಲಿ ಯಶಸ್ವಿಯಾಗಲಿ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ . ಮಾತನಾಡಿ, ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವದಾದ್ಯಂತ ಸೆಪ್ಟೆಂಬರ್ 15 ರಂದು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ಜನರ ಸ್ವಾತಂತ್ರ, ಸಮಾನತೆ ಹಾಗೂ ಹಕ್ಕುಗಳ ಸಮರ್ಥಕರಣವಾಗಿದ್ದು ಎಲ್ಲರಿಗೂ ಸಮಾನ ಅವಕಾಶಗಳನ್ನು ದೊರಕುವಂತೆ ಮಾಡುವ ವ್ಯವಸ್ಥೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಗರ ಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಬೈಕ್ ರ್ಯಾಲಿಯು ಉಡುಪಿ, ಮಂಗಳೂರು, ಹಾಸನ ಮಾರ್ಗವಾಗಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಕಾರ್ಯ ಬೆಂಗಳೂರು ವಿಧಾನಸೌಧ ವರೆಗೆ ನಡೆಯಲಿದೆ.


