ಉಡುಪಿ : ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬ್ರಹ್ಮಾವರ ಪೊಲೀಸರು ಪತ್ತೆಹಚ್ಚಿದ್ದು, 13.92 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ವಾರಂಬಳ್ಳಿ ಗ್ರಾಮದ ಆಕಾಶವಾಣಿ ಸಮೀಪ ವಾಹನ ತಪಾಸಣೆ ವೇಳೆ ಗೂಡ್ಸ್ ರಿಕ್ಷಾದಲ್ಲಿ ದಾಖಲೆಗಳಿಲ್ಲದೆ ಅಕ್ಕಿ ಸಾಗಾಟ ಮಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ ಕುರಿತು ಆಹಾರ ನಿರೀಕ್ಷಕ ವಸಂತ ಕುಮಾರ್ ಅವರನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿದಾಗ, ವಾಹನದಲ್ಲಿ 39 ಚೀಲಗಳಲ್ಲಿ ಒಟ್ಟು 13 ಕ್ವಿಂಟಲ್ 92 ಕೆ.ಜಿ. 300 ಗ್ರಾಂ ಅಕ್ಕಿ ಪತ್ತೆಯಾಗಿದ್ದು, ಅದು ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯಾಗಿರುವುದು ದೃಢಪಟ್ಟಿದೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ರೂ 47,300 ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಹನ ಚಾಲಕ ಜೀಪನ್ ಅಲಿಯಾಸ್ ಯಾಸಿನ್ ಬಳಿ ಅಕ್ಕಿ ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ಅಥವಾ ಪರವಾನಗಿ ಇಲ್ಲದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ. ಪೊಲೀಸರು ಅಕ್ಕಿ ತುಂಬಿದ್ದ ಚೀಲಗಳು, ಗೂಡ್ಸ್ ರಿಕ್ಷಾ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



