ಉಡುಪಿ: ಅಕ್ಷತಾ ಪೂಜಾರಿಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದರೂ, ಪೊಲೀಸರು ಹೋರಾಟವನ್ನು ಹತ್ತಿಕ್ಕಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಾವರ ಪೊಲೀಸ್ ಠಾಣೆ ಮುಂಭಾಗ ನಡೆದ ಶಾಂತಿಯುತ ಪ್ರತಿಭಟನೆಯ ಬಳಿಕ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಇದುವರೆಗೆ ತನಿಖೆ ಆರಂಭವಾಗಿಲ್ಲ, ತನಿಖಾಧಿಕಾರಿಯನ್ನೂ ನೇಮಕ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ನ್ಯಾಯದ ಬಗ್ಗೆ ಸಂಶಯ ಮೂಡಿದ್ದು, ಹೋರಾಟವನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ಯುವ ಚಿಂತನೆ ನಡೆದಿದೆ ಎಂದರು.

ಅಕ್ಷತಾ ಪೂಜಾರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಅಕ್ಷತಾ ಪೂಜಾರಿ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣವನ್ನು ರದ್ದುಗೊಳಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಸುಧಾಕರ್ ಅಮೀನ್ ಪಾಂಗಾಳ, ರಾಜು ಪೂಜಾರಿ, ಮಹೇಶ್ ಕುಮಾರ್ ಉಪಸ್ಥಿತರಿದ್ದರು.



