ಉಡುಪಿ : ಕಟಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಚ್ಚಡದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ತೀವ್ರಗೊಂಡಿದ್ದು, ನಿವೃತ್ತ ಶಿಕ್ಷಕರೊಬ್ಬರ ಮನೆಯಲ್ಲಿ ಸಾಕಿದ್ದ ಐದು ಆಡುಗಳನ್ನು ಬೀದಿ ನಾಯಿಗಳ ಗುಂಪು ಕಚ್ಚಿ ಕೊಂದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಅಚ್ಚಡದ ನಿವೃತ್ತ ಶಿಕ್ಷಕ ವಿಠಲ ಮಾಸ್ಟರ್ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಹಟ್ಟಿಯಲ್ಲಿ ಕಟ್ಟಿದ್ದ ಐದು ಆಡುಗಳ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿ ಕಚ್ಚಿ ಕೊಂದಿದೆ. ಕೆಲವು ಆಡುಗಳನ್ನು ಎಳೆದೊಯ್ದಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದಕ್ಕೂ ಕೆಲ ದಿನಗಳ ಹಿಂದೆ ಇದೇ ನಾಯಿಗಳ ಗುಂಪು ಮನೆಯ ಕೋಳಿ ಹಾಗೂ ಟರ್ಕಿ ಕೋಳಿಗಳ ಮೇಲೂ ದಾಳಿ ನಡೆಸಿ ಹಾನಿ ಉಂಟುಮಾಡಿತ್ತು ಎಂದು ಅವರು ಆರೋಪಿಸಿದ್ದಾರೆ. ಅಚ್ಚಡ ಮಲೆ ಜುಮಾದಿ ದೇವಸ್ಥಾನದ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೇ ಮಾರ್ಗದಲ್ಲಿ ಅಂಗನವಾಡಿ ಹಾಗೂ ಶಾಲಾ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರತಿದಿನ ಸಂಚರಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಗ್ರಾಮಸಭೆಗಳಲ್ಲಿ ಹಲವು ಬಾರಿ ದೂರು ನೀಡಿದ್ದರೂ ಕಟಪಾಡಿ ಗ್ರಾಮ ಪಂಚಾಯಿತಿ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮತ್ತೊಂದು ಅನಾಹುತ ಸಂಭವಿಸುವ ಮುನ್ನವೇ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಗ್ರಾಮಸ್ಥರು ಆಗ್ರಹಿಸಿದ್ದಾರೆ.


