ಉಡುಪಿ : ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಾಗಿ ರಾಜ್ಯದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅನಾಥ ಮಕ್ಕಳನ್ನು ಮೀಸಲಾತಿಯ ವ್ಯಾಪ್ತಿಗೆ ತಂದಿರುವುದು ನನ್ನ ಸಾರ್ವಜನಿಕ ಜೀವನದ ಅತ್ಯಂತ ತೃಪ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಮಾಜಿ ಮೀನುಗಾರಿಕಾ ಸಚಿವ, ಮಾಜಿ ಸಂಸದ ಹಾಗೂ ಹಿರಿಯ ರಾಜಕಾರಣಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಅವರು ಮಣಿಪಾಲದ ಫಾರ್ಚ್ಯೂನ್ ವ್ಯಾಲಿ ವ್ಯೂನಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಎಜುಕೇಶನ್ ಆ್ಯಂಡ್ ಮೆಡಿಕಲ್ ಗ್ರೂಪ್ (ಎಂಇಎಂಜಿ), ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ. (ಎಂಎಂಎನ್ಎಲ್) ಹಾಗೂ ಡಾ. ಟಿ.ಎಂ.ಎ. ಪೈ ಫೌಂಡೇಶನ್ಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ಹೊಸ ವರ್ಷದ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಸಾಮಾಜಿಕ, ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೀಡಿದ ಅಸಾಧಾರಣ ಕೊಡುಗೆಗಾಗಿ ಐವರು ಗಣ್ಯ ಸಾಧಕರಿಗೆ ‘ಹೊಸ ವರ್ಷದ ಪ್ರಶಸ್ತಿ–2026’ ಪ್ರದಾನಿಸಲಾಯಿತು. ಈ ಪೈಕಿ ಒಬ್ಬರಾಗಿ ಪ್ರಶಸ್ತಿ ಸ್ವೀಕರಿಸಿದ ಹೆಗ್ಡೆ, ಕುಟುಂಬವಿಲ್ಲದ ಅನಾಥ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೀಸಲಾತಿ ವಿಸ್ತರಣೆ ಮಹತ್ವದ ಸಮಾಜಪರ ಹೆಜ್ಜೆಯಾಗಿದೆ ಎಂದರು.

ಯುಎಇಯ ತುಂಬೆ ಗ್ರೂಪ್ನ ಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದಿನ್, ಬಹುಭಾಷಾ ಚಲನಚಿತ್ರ ಹಾಗೂ ರಂಗಭೂಮಿ ನಟಿ ವಿನಯಾ ಪ್ರಸಾದ್, ಮಾಹೆಯ ಕುಲಪತಿ ಲೆ. ಜ. (ಡಾ.) ಎಂ.ಡಿ. ವೆಂಕಟೇಶ್ ಹಾಗೂ ಕೆನರಾ ಬ್ಯಾಂಕ್ನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಕೆ. ಲಕ್ಷ್ಮೀನಾರಾಯಣ್ ಅವರಿಗೂ ಹೊಸ ವರ್ಷದ ಪ್ರಶಸ್ತಿ–2026 ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮಾಹೆ ಟ್ರಸ್ಟ್ ಅಧ್ಯಕ್ಷ ಹಾಗೂ ಎಂಇಎಂಜಿ ಅಧ್ಯಕ್ಷ ಡಾ. ರಂಜನ್ ಆರ್. ಪೈ, ಮಾಹೆ ಟ್ರಸ್ಟಿ ವಸಂತಿ ಆರ್. ಪೈ, ಮಣಿಪಾಲ ಮೀಡಿಯಾ ನೆಟ್ವರ್ಕ್ ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್ ಯು. ಪೈ, ಡಾ. ಟಿ.ಎಂ.ಎ. ಪೈ ಫೌಂಡೇಶನ್ ಟ್ರಸ್ಟಿ ಟಿ. ಸಚಿನ್ ಪೈ ಉಪಸ್ಥಿತರಿದ್ದರು. ಎಜಿಇ ಅಧ್ಯಕ್ಷ ಹಾಗೂ ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಪ್ರಾಸ್ತಾವಿಕ ಭಾಷಣ ಮಾಡಿದರು. ಮಣಿಪಾಲ ಎಂಐಟಿ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ ವಂದಿಸಿದರು. ಕಾರ್ಯಕ್ರಮವನ್ನು ಮಣಿಪಾಲ ಎಂಐಸಿಯ ಸಹಾಯಕ ಪ್ರಾಧ್ಯಾಪಕಿ ಶೃತಿ ವಿ. ಶೆಟ್ಟಿ ನಿರೂಪಿಸಿದರು.



