ಉಡುಪಿ : ಕರ್ನಾಟಕ ಬ್ಯಾಂಕ್ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಬುಧವಾರ ಉಡುಪಿಯ ಅಂಬಾಗಿಲಿನ ವಲಯ ಕಚೇರಿ ಆವರಣದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರವನ್ನು ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತನಿಧಿ ಕೇಂದ್ರ, ಎನ್.ಸಿ.ಡಿ ವಿಭಾಗ ಹಾಗೂ ಗಾಂಧಿ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ನಡೆಸಲಾಯಿತು.

ಶಿಬಿರವನ್ನು ಉದ್ಘಾಟಿಸಿದ ಕರ್ನಾಟಕ ಬ್ಯಾಂಕಿನ ನಿರ್ದೇಶಕ ಬಾಲಕೃಷ್ಣ ಹಲಸೆ ಮಾತನಾಡಿ, ರಕ್ತದಾನದಂತಹ ಮಹತ್ವದ ಸಾಮಾಜಿಕ ಕಾರ್ಯದಲ್ಲಿ ಅರ್ಹರು ಭಾಗವಹಿಸಿ, ರಕ್ತದ ಅಗತ್ಯವಿರುವವರಿಗೆ ನೆರವಾಗಬೇಕು ಎಂದು ಹೇಳಿದರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್ ಮಾತನಾಡಿ, ರಕ್ತದಾನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿ. ದೇಶದಲ್ಲಿ ಪ್ರತಿವರ್ಷ ಲಕ್ಷಾಂತರ ಯುನಿಟ್ ರಕ್ತದ ಕೊರತೆ ಉಂಟಾಗುತ್ತಿದ್ದು, ಜೀವ ಉಳಿಸಲು ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದರು.

ಗಾಂಧಿ ಆಸ್ಪತ್ರೆಯ ಮುಖ್ಯಸ್ಥ ಡಾ. ಹರೀಶ್ ಚಂದ್ರ ರಕ್ತದಾನದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಕರ್ನಾಟಕ ಬ್ಯಾಂಕ್ ಉಡುಪಿ ವಲಯ ಮುಖ್ಯಸ್ಥ ರಮೇಶ್ ವೈದ್ಯ ಮಾತನಾಡಿ, ಬ್ಯಾಂಕ್ ನಿರಂತರವಾಗಿ ಆರೋಗ್ಯ ಹಾಗೂ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು ಮುಂದೆಯೂ ಇಂತಹ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ಶಿಬಿರದಲ್ಲಿ ಸುಮಾರು 50 ಮಂದಿ ರಕ್ತದಾನ ಮಾಡಿದ್ದು, 56 ಮಂದಿಗೆ ಇಸಿಜಿ, 40 ಮಂದಿಗೆ ದಂತ ಪರೀಕ್ಷೆ ಹಾಗೂ 67 ಮಂದಿಗೆ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ನಡೆಸಲಾಯಿತು. ಬ್ಯಾಂಕಿನ ಗ್ರಾಹಕರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದರು. ಕಾರ್ಯಕ್ರಮದಲ್ಲಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



