ಉಡುಪಿ: ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಮಾನ್ಯತೆ ಪಡೆದ ಉಡುಪಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಉದ್ಘಾಟನೆ ಮಣಿಪಾಲದ ಮಾಧವ ಕೃಪಾ ಶಾಲಾ ಆವರಣದಲ್ಲಿ ಜರುಗಿತು. ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಲೋಗೋ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ನೂತನ ಜಿಲ್ಲಾ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಅಸೋಸಿಯೇಷನ್ ಆರಂಭಿಸಲಾಗಿದೆ. ಉಡುಪಿಯಲ್ಲಿ ಸಿಂಥೆಟಿಕ್ ಬಾಸ್ಕೆಟ್ಬಾಲ್ ಸ್ಟೇಡಿಯಂ ನಿರ್ಮಿಸಿ, ಆರು ತಿಂಗಳೊಳಗೆ ರಾಜ್ಯಮಟ್ಟದ ಟೂರ್ನಮೆಂಟ್ ಆಯೋಜಿಸುವ ಯೋಜನೆ ರೂಪಿಸಲಾಗಿದೆ ಎಂದರು.

ಮಾಧವ ಕೃಪಾ ಶಾಲೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ 160ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ಮಾಹೆ ಮತ್ತು ಇತರ ಪ್ರತಿಷ್ಠಿತ ವಿದ್ಯಾಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಾವಂತರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ಯೋಜನೆ ಇದೆ ಎಂದು ತಿಳಿಸಿದರು.

ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ, ಕ್ರಿಕೆಟ್ಗೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಸರಿಯಲ್ಲ. ಬಾಸ್ಕೆಟ್ಬಾಲ್ ಸೇರಿದಂತೆ ಇತರ ಕ್ರೀಡೆಗಳಿಗೂ ಸಮಾನ ಪ್ರೋತ್ಸಾಹ ಅಗತ್ಯವಿದೆ. ಮಾಹೆಯ ಮೆರೀನಾ ಮತ್ತು ಎಂಐಟಿ ಕ್ಯಾಂಪಸ್ನಲ್ಲಿ ಉತ್ತಮ ಕ್ರೀಡಾಂಗಣ ಸೌಲಭ್ಯಗಳಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಅಂತಾರಾಷ್ಟ್ರೀಯ ಬಾಸ್ಕೆಟ್ಬಾಲ್ ಆಟಗಾರ ಜುಗನ್ ಎಸ್. ದ್ಯಾನೇಶ್ವರನ್ ಮಾತನಾಡಿ, ಮಾಹೆ ತನ್ನಿಗೆ ಎರಡನೇ ಮನೆಸದೃಶವಾಗಿದ್ದು ಉತ್ತಮ ಸಹಕಾರ ನೀಡಿದೆ. ಟೂರ್ನಮೆಂಟ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಭಾಗವಹಿಸಿರುವುದು ಸಂತೋಷ ತಂದಿದೆ. ಈ ಭಾಗದಿಂದ ರಾಷ್ಟ್ರಮಟ್ಟದ ಆಟಗಾರರು ಹೊರಹೊಮ್ಮಲಿ ಎಂದು ಆಶಿಸಿದರು.

ಸಭೆಯ ನಂತರ ಜಿಲ್ಲಾ ಮಟ್ಟದ ಬಾಸ್ಕೆಟ್ಬಾಲ್ ಪಂದ್ಯಾಟಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಮುಕುಂದ ಕೃಪಾ ಶಾಲೆಯ ಪ್ರಾಂಶುಪಾಲೆ ಸ್ವಾತಿ ಕುಲಕರ್ಣಿ, ಚಂದ್ರಶೇಖರ್ ಪ್ರಭು, ಎ.ಕೆ. ಹುಸೇನ್, ವಿನಯ್ ಮೊಯ್ಲಿ ಸೇರಿದಂತೆ ಅಸೋಸಿಯೇಷನ್ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



