ಉಡುಪಿ: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯ ಪ್ರಕಟಿಸಿದ 2025ನೇ ಸಾಲಿನ ದೀನ್ ದಯಾಳ ಉಪಾಧ್ಯಾಯ ಪಂಚಾಯತ್ ಸತತ ಅಭಿವೃದ್ಧಿ ಪುರಸ್ಕಾರಕ್ಕೆ ರಾಜ್ಯಗಳಿಗೆ ನೀಡುವ ಒಟ್ಟು ಆರು ವಿಭಾಗಗಳಲ್ಲಿ ಐದು ವಿಭಾಗಗಳಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ಗಳು ಆಯ್ಕೆಯಾಗಿರುವುದಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತೋಷ ವ್ಯಕ್ತಪಡಿಸಿದ್ದಾರೆ.

ಈ ಪುರಸ್ಕಾರಕ್ಕೆ ಉಡುಪಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಐದು ಗ್ರಾಮ ಪಂಚಾಯತ್ಗಳು ಆಯ್ಕೆಯಾಗಿವೆ. ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ಬಡತನ ನಿರ್ಮೂಲನೆ ವಿಭಾಗದಲ್ಲಿ, ಕುಂದಾಪುರ ತಾಲ್ಲೂಕಿನ ವಂಡ್ಸೆ ಗ್ರಾಮ ಪಂಚಾಯತ್ ಆರೋಗ್ಯ ವಿಭಾಗದಲ್ಲಿ, ಕಾರ್ಕಳ ತಾಲ್ಲೂಕಿನ ಸಾಣೂರು ಗ್ರಾಮ ಪಂಚಾಯತ್ ಸ್ವಯಂ ಮೂಲಸೌಕರ್ಯ ಅಭಿವೃದ್ಧಿ ವಿಭಾಗದಲ್ಲಿ, ಹೆಬ್ರಿ ತಾಲ್ಲೂಕಿನ ಮಡಾಮಕ್ಕಿ ಗ್ರಾಮ ಪಂಚಾಯತ್ ಜಲ ಸಮೃದ್ಧಿ ವಿಭಾಗದಲ್ಲಿ ಹಾಗೂ ಕುಂದಾಪುರ ತಾಲ್ಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ವಿಭಾಗದಲ್ಲಿ ಈ ಗೌರವಕ್ಕೆ ಪಾತ್ರವಾಗಿವೆ.


ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವುದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಉತ್ತಮ ಆಡಳಿತದ ಪ್ರತೀಕವಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಈ ಸಾಧನೆಗೆ ಸಂಬಂಧಿಸಿದ ಪಂಚಾಯತ್ಗಳ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರನ್ನು ಸಂಸದರು ಅಭಿನಂದಿಸಿ, ಇಂತಹ ಸಾಧನೆಗಳು ಇತರ ಪಂಚಾಯತ್ಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು. ಇದೇ ವೇಳೆ ಈ ಪುರಸ್ಕಾರ ನೀಡಿದ ಕೇಂದ್ರ ಸರ್ಕಾರವನ್ನು ಸಹ ಅವರು ಅಭಿನಂದಿಸಿದರು.



