ಉಡುಪಿ: ಉಡುಪಿ ನಗರದ ಎರಡು ದೈವಸ್ಥಾನಗಳಲ್ಲಿ ನಡೆದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಭೇದಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ.

ದೈವಸ್ಥಾನಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಆರೋಪಿಯ ಚಲನವಲನಗಳನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಈ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢಪಟ್ಟಿದ್ದು, ಜಿಲ್ಲೆಯ ವಿವಿಧ ದೇವಸ್ಥಾನಗಳ ಹುಂಡಿ ಹಾಗೂ ಕಾಣಿಕೆ ಡಬ್ಬಿ ಕಳವು ಪ್ರಕರಣಗಳಲ್ಲಿಯೂ ಆತನ ಕೈವಾಡವಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿರುವ ಪೊಲೀಸರು, ಆತನಿಂದ ಇನ್ನಷ್ಟು ಕಳವು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಉಡುಪಿ ನಗರ ಠಾಣೆ ಪೊಲೀಸರು ಮುಂದುವರಿಸಿದ್ದಾರೆ.


