ಉಡುಪಿ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಹಾಗೂ ಬಿರುಸಿನ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಕೇಂದ್ರ ಗೃಹ ಸಚಿವಾಲಯದ ಇಂಟಿಗ್ರೇಟೆಡ್ ಕಂಟ್ರೋಲ್ ರೂಂ ಫಾರ್ ಎಮರ್ಜೆನ್ಸಿ ರೆಸ್ಪಾನ್ಸ್ ಎಚ್ಚರಿಕೆ ನೀಡಿದೆ. ಆಗಸ್ಟ್ 3ರಿಂದ 7ರವರೆಗೆ ಅರಬ್ಬಿ ಸಮುದ್ರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕೆಲವೆಡೆ ಗಾಳಿಯ ವೇಗ 65 ಕಿ.ಮೀ.ವರೆಗೆ ತಲುಪುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ವಿಶೇಷವಾಗಿ ಕರ್ನಾಟಕ, ಕೇರಳ ಕರಾವಳಿ, ಲಕ್ಷದ್ವೀಪ ಸಮುದ್ರ ಪ್ರದೇಶ ಹಾಗೂ ಸುತ್ತಮುತ್ತಲಿನ ಸಮುದ್ರ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಬಿರುಗಾಳಿ ಬೀಸಲಿದ್ದು, ಅದು 60 ಕಿ.ಮೀ.ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಹಾಗೂ ಈಗಾಗಲೇ ಸಮುದ್ರದಲ್ಲಿರುವವರು ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತ ತೀರಗಳಿಗೆ ಮರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಗಳ ಆಡಳಿತ ಮತ್ತು ಮೀನುಗಾರಿಕಾ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.


