ಉಡುಪಿ: ಉಡುಪಿ ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್ಜಿಎಮ್ ಮೈದಾನದಲ್ಲಿ ಎರಡು ದಿನ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟಕ್ಕೆ ತೆರೆಬಿದ್ದಿದೆ. ಸಮಾರೋಪದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್ ಮಾತನಾಡಿ, ಉಡುಪಿ ವಕೀಲರ ಸಂಘವು ನಿತ್ಯದ ಕಾರ್ಯಗಳೊಂದಿಗೆ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ವಕೀಲರ ಬೇಡಿಕೆಗಳಿಗೆ ಕೊನೆ ಇರುವುದಿಲ್ಲ. ಕ್ರೀಡೆ ಹಾಗು ನ್ಯಾಯಾಂಗದಲ್ಲಿ ತುಡಿತ ಇದ್ದಾಗ, ಹೊಸ ವಿಚಾರಗಳು ಬರುತ್ತವೆ. ಅಂತಹ ಮನಸ್ಸುಗಳಿಂದ ಇಂತಹ ಬದಲಾವಣೆಗಳನ್ನು ತರಲು ಸಾಧ್ಯವಿದೆ ಎಂದರು.
ಕ್ರೀಡಾಕೂಟದಿಂದ ವಕೀಲರ ವೃತ್ತಿ ಹಾಗು ವ್ಯಕ್ತಿತ್ವದ ಅನಾವರಣ ಆಗಿದೆ. ಕ್ರೀಡೆಯ ಚುರುಕುತನ, ನ್ಯಾಯ ನೀಡುವಲ್ಲಿಯೂ ಇರಬೇಕು. ಕ್ರೀಡಾಪಟುಗಳಿಗೆ ಗುಣಮಟ್ಟದ ಸೇವೆ, ಸೌಲಭ್ಯಗಳನ್ನು ಉಡುಪಿ ವಕೀಲರ ಸಂಘವು ಒದಗಿಸಿದೆ. ಕ್ರೀಡಾಕೂಟದಲ್ಲಿ ವರ್ಷಂಪ್ರತಿ ಕ್ರೀಡಾಪಟುಗಳ ಪಾಲ್ಗೊಳ್ಳುವಿಕೆ ಹೆಚ್ಚಳವಾಗುತ್ತಿರುವುದು ಸಂತೋಷದಾಯಕವಾಗಿದೆ ಎಂದರು. ತಾನು ನೋಡಿರುವಂತೆ ಅನೇಕ ಕಡೆಗಳಲ್ಲಿ ಹಿರಿಯ ವಕೀಲರು ಗ್ರಂಥಾಲಯ, ಕೆಲವು ನ್ಯಾಯವಾದಿಗಳು ಕ್ರೀಡಾಂಗಣದಲ್ಲಿ ಸಮಯ ಕಳೆಯುತ್ತಾರೆ. ಅಂತೆಯೇ ವೈದ್ಯರು, ಇಂಜಿನಿಯರ್ಗಳು ಪ್ರತಿದಿನ ದೈಹಿಕ ಚಟುವಟಿಕೆಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ. ಧೂಳು, ಬಿಸಿಲಿನಲ್ಲಿ ಆಟ ಆಡುವುದು ಒಂದು ದಿನದಲ್ಲಿ ಸಾಧ್ಯವಿಲ್ಲ. ಇದಕ್ಕಾಗಿ ದೈಹಿಕ ಹಾಗು ಮಾನಸಿಕ ತಯಾರಿ ಅಗತ್ಯ ಇದೆ ಎಂದು ನುಡಿದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಹೆಚ್.ವಿ ರಾಘವೇಂದ್ರ ಮಾತನಾಡಿ, ಕರಾವಳಿ ಭಾಗದಲ್ಲಿ ಹೈಕೋರ್ಟಿನ ವಿಭಾಗೀಯ ಪೀಠವನ್ನು ಸ್ಥಾಪಿಸಬೇಕೆಂಬ ಬೇಡಿಕೆಗೆ ಉಡುಪಿ ವಕೀಲರ ಸಂಘದ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ಈ ಬೇಡಿಕೆಯೂ ಹೋರಾಟ ಸ್ವರೂಪ ಪಡೆದುಕೊಳ್ಳಲಿದ್ದು, ಇದಕ್ಕೆ ಉಡುಪಿ ನ್ಯಾಯವಾದಿಗಳು ಹಾಗು ಸಂಘದ ಬೆಂಬಲವನ್ನು ಯಾಚಿಸಿದರು. ಪೋಕ್ಸೋ ವಿಶೇಷ ನ್ಯಾಯಾಲಯದ ಹೆಚ್ಚುವರಿ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ, ಹಿರಿಯ ನ್ಯಾಯವಾದಿ ಎಮ್.ಶಾಂತಾರಾಮ್ ಶೆಟ್ಟಿ, ಎಮ್ಐಟಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಮಲ್ಯ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ, ಕ್ರೀಡಾಕೂಟದ ಸಂಚಾಲಕ ಮಿತ್ರ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಇಂಚರಾ ಶಿವಪುರ ಪ್ರಾರ್ಥಿಸಿದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ ಎ.ಆರ್ ವಂದಿಸಿದರು. ನ್ಯಾಯವಾದಿ ಸಹನಾ ಕುಂದರ್ ನಿರೂಪಿಸಿದರು.