ಉಡುಪಿ: ಕರ್ನಾಟಕ ಬ್ಯಾಂಕ್ ಸಂಸ್ಥಾಪನೆಯ 102ನೇ ವಾರ್ಷಿಕೋತ್ಸವದ ಅಂಗವಾಗಿ, ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಮಂಗಳವಾರ ಅಂಬಾಗಿಲಿನಲ್ಲಿರುವ ಕರ್ನಾಟಕ ಬ್ಯಾಂಕ್ ಉಡುಪಿ ವಲಯ ಕಚೇರಿಯಲ್ಲಿ ಆಯೋಜಿಸಲಾಯಿತು.

ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆಯ ಎನ್ಸಿಡಿ ವಿಭಾಗ ಹಾಗೂ ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಬೆಳಗ್ಗೆ 8.30ರಿಂದ ಮಧ್ಯಾಹ್ನ 2ರವರೆಗೆ ನಡೆದ ಈ ಶಿಬಿರದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆ, ದಂತ ತಪಾಸಣೆ, ಇಸಿಜಿ, ಹೀಮೋಗ್ಲೋಬಿನ್ (HB), ರಕ್ತದ ಗುಂಪು ಪರೀಕ್ಷೆ ಮತ್ತು ಸ್ವಯಂಪ್ರೇರಿತ ರಕ್ತದಾನ ವ್ಯವಸ್ಥೆ ಮಾಡಲಾಗಿತ್ತು. ಕರ್ನಾಟಕ ಬ್ಯಾಂಕಿನ ಗ್ರಾಹಕರು, ಸಾರ್ವಜನಿಕರು ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಯ ಸೌಲಭ್ಯ ಪಡೆದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕಿನ ನಿರ್ದೇಶಕ ಬಾಲಕೃಷ್ಣ ಹಲಸೆ, ರಕ್ತದಾನವು ಅತ್ಯಂತ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ಅಗತ್ಯವಿರುವವರ ಜೀವ ಉಳಿಸುವ ಕಾರ್ಯದಲ್ಲಿ ಬ್ಯಾಂಕಿನೊಂದಿಗೆ ಸಮಾಜ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಗಾಂಧಿ ಆಸ್ಪತ್ರೆಯ ಮುಖ್ಯಸ್ಥ ಡಾ. ಹರೀಶ್ ಚಂದ್ರ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್, ಕರ್ನಾಟಕ ಬ್ಯಾಂಕ್ ಉಡುಪಿ ವಲಯ ಕಚೇರಿಯ ಸಹಾಯಕ ಮಹಾಪ್ರಬಂಧಕ ಹಾಗೂ ವಲಯ ಮುಖ್ಯಸ್ಥ ರಮೇಶ್ ವೈದ್ಯ, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ ಉಪಸ್ಥಿತರಿದ್ದರು. ಕರ್ನಾಟಕ ಬ್ಯಾಂಕಿನ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯ ಬಾರ್ವೆ ಸ್ವಾಗತಿಸಿ, ನಿರೂಪಿಸಿದರು. ಶಿಬಿರದಲ್ಲಿ ಸುಮಾರು 50 ಮಂದಿ ರಕ್ತದಾನ ಮಾಡಿದ್ದು, 56 ಇಸಿಜಿ ಪರೀಕ್ಷೆ, 40 ದಂತ ತಪಾಸಣೆ, 67 ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆಗಳು ನಡೆಸಲಾಯಿತು. ಬ್ಯಾಂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



