ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಕಳೆದ ೨ ವರ್ಷದಲ್ಲಿ ಆರ್ಥಿಕತೆಯನ್ನು 7 ನೇ ಸ್ಥಾನದಿಂದ 3 ಸ್ಥಾನಕ್ಕೆ ತಂದಿದೆ. ಮುಂದಿನ ಮೂರು ವರ್ಷಗಳಲ್ಲಿಯೂ ಇದೇ ರೀತಿ ಅಭಿವೃದ್ಧಿ ಪರ್ವ ಮುಂದುವರಿಯಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ. ಅವರು ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಪಂಚ ಗ್ಯಾರೆಂಟಿ ಮೂಲಕ ಸಮಾಜದ ಎಲ್ಲಾ ವರ್ಗದವರಿಗೂ ಆರ್ಥಿಕ ಉತ್ತೇಜನ ನೀಡುವ ಕೆಲಸ ಸರಕಾರದಿಂದ ಆಗಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಯುವಕರಿಗೆ ಉದ್ಯೋಗ ಸೃಷ್ಠಿಯಲ್ಲೂ ಮುಂದಿದೆ ಎಂದರು. ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಯದಲ್ಲಿ ಸರಕಾರದ ಬೊಕ್ಕಸ ಖಾಲಿಯಾಗಲಿದೆ ಎಂದು ಬಿಜೆಪಿಯವರು ಲೇವಡಿ ಮಾಡಿದ್ದರು. ಆದರೆ ಸರಕಾರ ಬೊಕ್ಕಸ ಖಾಲಿಯಾಗಿಲ್ಲ. ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿವೆ. ಬಿಜೆಪಿ ಆಡಳಿತ ನಡೆಸುವ ರಾಜ್ಯಗಳಲ್ಲೂ, ಗ್ಯಾರೆಂಟಿ ಯೋಜನೆಯನ್ನು ಅನುಕರಿಸಲಾಗಿದೆ ಎಂದರು.
ಬಳ್ಳಾರಿಯ ಹೊಸಪೇಟೆಯಲ್ಲಿ ಮೇ.20 ರಂದು ನಡೆಯಲಿರುವ ಸಾಧನ ಸಮಾವೇಶಕ್ಕೆ ಉಡುಪಿ ಜಿಲ್ಲೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಕಳೆದ ೨ ವರ್ಷದಲ್ಲಿ ಪಂಚ ಗ್ಯಾರೆಂಟಿ ಮೂಲಕ 1,670 ಕ್ಕೂ ಅಧಿಕ ಕೋಟಿ ರೂಪಾಯಿಗಳು ಸೌಲಭ್ಯವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. ಶಕ್ತಿ ಯೋಜನೆ ಅಡಿ 2.5 ಕೋಟಿ ಜನ ಪ್ರಯಾಣಿಸಿದ್ದು, ₹ 9.3 ಕೋ ಅಧಿಕ ಹಣ ವ್ಯಯಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಬಿಪಿನ್ ಚಂದ್ರಪಾಲ್ ನಕ್ರೆ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕಾಂಚನ್, ಮಹಾಬಲ ಕುಂದರ್ ಉಪಸ್ಥಿತರಿದ್ದರು.


