ಕಾಪು: ನಮ್ಮ ದೇಶ ದೇವಭೂಮಿಯಾಗಿದೆ. ಇಲ್ಲಿನ ಸಾವಿರಾರು ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಪ್ರಾಚೀನ ಮತ್ತು ಐತಿಹಾಸಿಕ ಪರಂಪರೆಯನ್ನು ವಿಶ್ವಕ್ಕೆ ಸಾರುತ್ತಿವೆ. ಕಲೆ, ವೇದ, ಉಪನಿಷತ್ತುಗಳನ್ನು ಉಳಿಸಿ ಬೆಳೆಸುವ ಆಶ್ರಯ ತಾಣವಾಗಿವೆ. ಸನಾತನ ಹಿಂದೂ ಧರ್ಮ, ಭಾರತೀಯ ಪರಂಪರೆ, ಸಂಸ್ಕೃತಿ, ಸಂಸ್ಕಾರದ ಪುನರುತ್ಥಾನದ ಕೇಂದ್ರಗಳಾಗಿದ್ದು, ಪ್ರಾಚೀನ ಪರಂಪರೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಬರುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿವೆ ಎಂದು ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಹೇಳಿದರು.

ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ 7ನೇ ದಿನದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಧಾರ್ಮಿಕ ಸಭೆಯನ್ನು ವಿಖ್ಯಾತಾನಂದ ಶ್ರೀ ಉದ್ಘಾಟಿಸಿದರು. ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಶ್ರೀಪಾದಂಗಳವರು ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಎಂ.ಆರ್.ಜಿ. ಗ್ರೂಪ್ಸ್ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವರಾದ ರಮಾನಾಥ ರೈ, ಪ್ರಮೋದ್ ಮಧ್ವರಾಜ್, ಕಾಪು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಕ್ರಂ ಕಾಪು, ನ್ಯಾಯವಾದಿ ಮಹೇಶ್ ಕೋಟ್ಯಾನ್ ಮುಂಬಯಿ, ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್ ಮಲ್ಪೆ, ಪ್ರೇಮನಾಥ್ ಶೆಟ್ಟಿ ದುಬಾೖ, ಸುಂದರ್ ಶೆಟ್ಟಿ ಅಬುಧಾಬಿ ಅತಿಥಿಗಳಾಗಿದ್ದರು.

ದಾನಿಗಳಾದ ಮಹೇಶ್ ಕೋಟ್ಯಾನ್ ಮುಂಬಯಿ, ಹರೀಶ್ ಪಿ. ಶೆಟ್ಟಿ ಗುರ್ಮೆ ಅವರನ್ನು ಸಮ್ಮಾನಿಸಲಾಯಿತು. ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ದಿವಾಕರ ಶೆಟ್ಟಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಉಪಸ್ಥಿತರಿದ್ದರು. ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ಅಶೋಕ್ ಪಕಳ, ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು.
