ಉಡುಪಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ, ನಮ್ಮ ಮನೆ ನಮ್ಮ ಮರ ಅಭಿಯಾನ ತಂಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಭಾಗಿತ್ವದಲ್ಲಿ ಅಲೆವೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿ ಕಾರಂತರ ನೆನಪಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಏಕ್ಕಾರು, ಡಾ. ಶಿವರಾಮ ಕಾರಂತರು ತಮ್ಮ ಕೃತಿಗಳ ಮೂಲಕ ಕರಾವಳಿಯ ಪರಿಸರದ ಮಹತ್ವವನ್ನು ಜನರಿಗೆ ತಿಳಿಸಿಕೊಟ್ಟಿದ್ದಾರೆ. ಪರಿಸರದ ಕುರಿತು ಅವರ ಕಾಳಜಿ ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿದ್ದು, ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಕಾರ್ಯವನ್ನು ಅವರು ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರ ನೆನಪಿನಲ್ಲಿ ಪರಿಸರ ದಿನಾಚರಣೆ ನಡೆಸುವುದು ಅರ್ಥಪೂರ್ಣ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ಮಾತನಾಡಿ, ಪರಿಸರವು ಮಾನವ ಬದುಕಿನ ಜೀವನಾಡಿಯಾಗಿದ್ದು, ಅದರ ಮಹತ್ವವನ್ನು ಅರಿತು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿದರು.

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಸದಸ್ಯೆ ದೀಪಾ ಕಕ್ಕಿ, ಮಣಿಪಾಲ್ ರೇಡಿಯೋದ ಡಾ. ರಶ್ಮಿ ಅಮ್ಮೆಂಬಳ, ಆಕ್ಸಿಸ್ ಬ್ಯಾಂಕ್ನ ಜ್ಯೋತಿ ಶೆಟ್ಟಿ, ಡಾ. ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಸತೀಶ್ ಕೊಡವೂರು, ಮೊಲೊಟೊ ಕೇರ್ನ ಕೆ.ಆರ್. ತಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮದಲ್ಲಿ ಸ್ವಾಗತಿಸಿ, ನಿರೂಪಣೆ ನೆರವೇರಿಸಿದರು.



