ಉಡುಪಿ : ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ರೌಡಿ ಶೀಟರ್ ಸೋಮನಾಥ/ ಸೋಮು ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಕುಂಬ್ರಪದವು, ತೆಳ್ಳಾರು ರಸ್ತೆ, ಕಸಬ ಗ್ರಾಮ ನಿವಾಸಿಯಾಗಿರುವ ಸೋಮನಾಥ/ ಸೋಮು (40) ವಿರುದ್ಧ ಈಗಾಗಲೇ ವಿವಿಧ ಸ್ವರೂಪದ 11 ಪ್ರಕರಣಗಳು ದಾಖಲಾಗಿವೆ. ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಹಿನ್ನೆಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ರೌಡಿ ಶೀಟರ್ ತೆರೆಯಲಾಗಿತ್ತು.

ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಂಟಿಯಾಗಿ ಏ.30ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ಸೋಮುವನ್ನು ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಮುಂದುವರಿದ ಕಟ್ಟುನಿಟ್ಟಿನ ಕ್ರಮಗಳು ಮುಂದೆಯೂ ಜಾರಿಯಲ್ಲಿರಲಿವೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.



