ಉಡುಪಿ :ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನದಿ ದಂಡೆಗಳ ಸಂರಕ್ಷಣೆ ಹಾಗೂ ತೋಡು ಬದಿಕಟ್ಟು ಕಾಮಗಾರಿಗಳಿಗೆ ಅನುದಾನ ಮಂಜೂರಾತಿ ಸಂಬಂಧ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ವಿಶೇಷವಾಗಿ ಕುಂಭಾಶಿಯ ಪರಿಶಿಷ್ಟ ಜಾತಿ ಕಾಲೋನಿಯ ತೋಡಿನ ಬದಿಕಟ್ಟು ಕಾಮಗಾರಿಗೆ ತುರ್ತು ಅನುದಾನ ಅಗತ್ಯವಿರುವುದನ್ನು ಶಾಸಕರು ಸಚಿವರ ಗಮನಕ್ಕೆ ತಂದರು.

ಈ ಕಾಮಗಾರಿಯಿಂದ ಮಳೆಗಾಲದಲ್ಲಿ ಉಂಟಾಗುವ ಹಾನಿ ತಡೆಗಟ್ಟುವ ಜೊತೆಗೆ ಸ್ಥಳೀಯ ನಿವಾಸಿಗಳ ಸುರಕ್ಷತೆಗೆ ನೆರವಾಗಲಿದೆ ಎಂದು ಅವರು ತಿಳಿಸಿದರು.

ಮನವಿಗೆ ಸ್ಪಂದಿಸಿದ ಸಚಿವ ಎನ್.ಎಸ್. ಬೋಸರಾಜು ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.



