ಉಡುಪಿ: ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ನೇಕಾರರ ಸೇವಾ ಕೇಂದ್ರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಇಂದು ಉಡುಪಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ ಸಂಬಂಧಿಸಿದ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದರು. ಕೈಮಗ್ಗ

ಕೇಂದ್ರದಲ್ಲಿ ಒಟ್ಟು 45 ಕೈಮಗ್ಗಗಳು ಹಾಗೂ ಕೇಂದ್ರದ ಸಮರ್ಥ ಯೋಜನೆಯಡಿ ತರಬೇತಿ ಹೊಂದಿದ 36 ಜನ ನೇಕಾರರು ಕಾರ್ಯ ನಿರ್ವಹಿಸುತ್ತಿದ್ದು, ಅವರೊಂದಿಗೆ ಸಂಸದರು ಚರ್ಚಿಸಿ, ನೇಕಾರಿಕೆಗೆ ಸಂಬಂಧಿಸಿದ ಸಮಸ್ಯೆ ಹಾಗೂ ಅಭಿವೃದ್ಧಿಗಳ ಕುರಿತು ಮಾಹಿತಿ ಪಡೆದು ಕೇಂದ್ರದಿಂದ ದೊರಕಬಹುದಾದ ಯೋಜನೆಗಳಿಗೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನೇಕಾರರ ಸಂಘದ ಸ್ವಂತ ಕಟ್ಟಡ ನಿರ್ಮಿಸಲು ಅನುದಾನ ಹಾಗೂ ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಸಂಚರಿಸಲು ಉಚಿತ ಬಸ್ ಸಂಚಾರದ ವ್ಯವಸ್ಥೆ ಕಲ್ಪಿಸುವಂತೆ ಕೋರಿಕೆ ಸಲ್ಲಿಸಿದರು. ಮನವಿಗೆ ಸ್ಪಂದಿಸಿ, ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಸಂಸದರೊಂದಿಗೆ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ನವೀನ್ ಕುತ್ಯಾರು, ಕೈಮಗ್ಗ ನೇಕಾರರ ಸಂಘದ ಅಧ್ಯಕ್ಷ ರತ್ನಾಕರ್, ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮತ್ತು ಕೌಶಲಾಭಿವೃದ್ಧಿ ಇಲಾಖೆಯ ಅಧಿಕಾರಿ ಬಿ. ಅರುಣ್ ಕುಮಾರ್ ಮುಂತಾದವರು ಹಾಜರಿದ್ದರು.
