ಉಡುಪಿ : ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯ ಬೀಳದೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಇವುಗಳಿಂದ ದೂರವಿರಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬರುತ್ತಿವೆ. ಜಿಲ್ಲೆಯಲ್ಲೂ ಸಹ ಕೆಲವು ಪ್ರಕರಣಗಳು ಉಂಟಾಗಿವೆ. ಸಾರ್ವಜನಿಕರು ಸರ್ಕಾರ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ವಯೋವೃದ್ಧರು, ಮಕ್ಕಳು, ಗರ್ಭಿಣಿಯರು ಕೋವಿಡ್ ಸೋಂಕಿನ ಬಗ್ಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಜ್ವರ, ಕೆಮ್ಮು, ನೆಗಡಿ, ಶೀತ, ಉಸಿರಾಟ ತೊಂದರೆ ಮುಂತಾದ ಗುಣಲಕ್ಷಣಗಳು ಕಂಡುಬಂದಲ್ಲಿ ಕೊರೋನಾ ಪರೀಕ್ಷೆಯನ್ನು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬೇಕು. ಸೋಂಕು ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರ ಜೊತೆಗೆ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದರು.

ಪೂರ್ವ ಮುಂಗಾರು ಮಳೆ ವ್ಯಾಪಕವಾಗಿ ಆಗಿದ್ದು, ಡೆಂಗ್ಯೂ, ಮಲೇರಿಯಾ, ಚಿಕನ್ಗೂನ್ಯಾ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಸಾರ್ವನಿಕರಿಗೆ ಇವುಗಳ ತಡೆಗಟ್ಟುವ ಕುರಿತು ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ, ರೋಗಗಳು ಹರಡದಂತೆ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಗಳು ಕಾರ್ಯಪ್ರವೃತ್ತರಾಗಬೇಕು. ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಜಿಲ್ಲೆಯಲ್ಲಿ 2025 ರ ಜನವರಿ ಯಿಂದ ಈವರೆಗೆ 8175 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ ಹಾಗೂ 202 ಹಾವು ಕಡಿತ ಪ್ರಕರಣಗಳು ಉಂಟಾಗಿವೆ. ಪ್ರತಿಯೊಂದು ಆರೋಗ್ಯ ಕೇಂದ್ರಗಳಲ್ಲಿಯೂ ಈ ಕಡಿತ ಪ್ರಕರಣಗಳಿಗೆ ಅಗತ್ಯವಿರುವ ಔಷಧಿಗಳನ್ನು ದಾಸ್ತಾನು ಇಟ್ಟುಕೊಳ್ಳುವುದರೊಂದಿಗೆ ಪ್ರತಿಯೊಂದು ಪ್ರಕರಣದವರಿಗೂ ಸಹ ಚುಚ್ಚು ಮದ್ದುಗಳನ್ನು ನೀಡುವುದರೊಂದಿಗೆ ಚಿಕಿತ್ಸೆಗಳನ್ನು ನೀಡಬೇಕು. ಜನಸಾಮಾನ್ಯರು ಅಗತ್ಯ ಎಚ್ಚರಿಕೆಗಳನ್ನು ವಹಿಸುವುದರೊಂದಿಗೆ ಇವುಗಳ ಕಡಿತದಿಂದ ದೂರ ಉಳಿಯಲು ಸಾಧ್ಯ. ರೈತರು ಸಹ ಸುರಕ್ಷತಾ ಸಾಧನಗಳನ್ನು ಬಳಕೆ ಮಾಡಬೇಕು ಎಂದರು.

ಮಕ್ಕಳಿಗೆ ನೀಡುವ ರೋಗ ನಿರೋಧಕ ಚುಚ್ಚುಮದ್ದುಗಳನ್ನು ಪ್ರತಿಯೊಬ್ಬರಿಗೂ ನೀಡಿ, ಯಾವ ಒಬ್ಬ ಮಗವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಶಾಲೆಗಳು ಹಾಗೂ ಅಂಗನವಾಡಿಗಳ ದಾಖಲಾತಿ ಸಂದರ್ಭದಲ್ಲಿ ಲಸಿಕೆಗಳನ್ನು ಪಡೆದಿರುವ ಬಗ್ಗೆ ಪೋಷಕರಿಂದ ಮಾಹಿತಿ ಪಡೆಯಬೇಕು. ಒಂದೊಮ್ಮೆ ಲಸಿಕೆಗಳು ಹಾಕಿಸಿಕೊಳ್ಳದಿದ್ದಲ್ಲಿ ಅವುಗಳನ್ನು ಹಾಕಿಸಲು ಕ್ರಮವಹಿಸಬೇಕೆಂದರು. ಜಿಲ್ಲೆಯ ಪ್ರತಿಯೊಂದು ಆಸ್ಪತ್ರೆಗಳಲ್ಲಿಯೂ ಕೆ.ಪಿ.ಎಂ.ಇ ಕಾಯ್ದೆಯನ್ವಯ ಆಸ್ಪತ್ರೆಗಳಲ್ಲಿ ಅಗ್ನಿ ನಿರೋಧಕ ಸೌಲಭ್ಯಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ಬಗ್ಗೆ ಆಗಿಂದಾಗ್ಗೆ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಎಂಡೋಸಲ್ಫಾನ್ ಪೀಡಿತರಿಗೆ ಅಗತ್ಯವಿರುವ ಆರೋಗ್ಯ ಸೇವೆಗಳು ಹಾಗೂ ಸೌಲಭ್ಯಗಳನ್ನು ತಪ್ಪದೇ ಕಲ್ಪಿಸಬೇಕು. ಕೆಲವು ಇತರೆ ವಿಕಲಚೇತನರುಗಳು ಎಂಡೋಸಲ್ಫಾನ್ ಪೀಡಿತರಿಗೆ ದೊರೆಯುವ ಸೌಲಭ್ಯಗಳನ್ನು ಪಡೆಯುವ ಉದ್ದೇಶದಿಂದ ಸುಳ್ಳು ದಾಖಲೆಗಳನ್ನು ಪಡೆಯಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ನೈಜತೆಯನ್ನು ಪರಿಶೀಲಿಸಬೇಕು ಎಂದರು. ಜಿಲ್ಲೆಯ ಪ್ರತಿಯೊಂದು ಆಸ್ಪತ್ರೆಗಳಲ್ಲಿಯೂ ಉತ್ಪತ್ತಿಯಾಗುವ ತ್ಯಾಜ್ಯಗಳು ವೈಜ್ಞಾನಿಕವಾಗಿ ವಿಲೇವಾರಿ ಆಗುತ್ತಿರುವ ಬಗ್ಗೆ ಪರಿಶೀಲನೆಯನ್ನು ತಪ್ಪದೇ ಮಾಡಬೇಕು. ಇವುಗಳ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಕ್ರಮ ವಹಿಸಬೇಕು. ಆಸ್ಪತ್ರೆಗಳಲ್ಲಿ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡುವ ಬಗ್ಗೆಯೂ ನೋಡಿಕೊಳ್ಳಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಡಿ.ಎಸ್.ಓ ಡಾ. ನಾಗರತ್ನ, ಜಿಲ್ಲಾ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ಜನ್ ಡಾ. ಹೆಚ್.ಅಶೋಕ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಕೆ.ಎಂ.ಸಿ.ಯ ತಜ್ಞ ವೈದ್ಯರಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನೀರಿನ ಮೂಲಗಳು ಕುಡಿಯಲು ಯೋಗ್ಯವಾಗಿರುವ ಬಗ್ಗೆ ನೀರಿನ ಗುಣಮಟ್ಟ ಪರೀಕ್ಷೆಯನ್ನು 2025 ನೇ ಸಾಲಿನಲ್ಲಿ 7650 ಕೈಗೊಳ್ಳಲಾಗಿದ್ದು, ಅವುಗಳಲ್ಲಿ 983 ನೀರು ಕಲುಷಿತಗೊಂಡಿರುವುದು ಕಂಡುಬಂದಿದೆ. ಅವುಗಳಲ್ಲಿ 908 ತೆರೆದ ಬಾವಿಗಳನ್ನು ಕ್ಲೋರಿನೇಷನ್ ಮಾಡಲಾಗಿದೆ. ಕ್ಲೋರಿನೇಷನ್ ಕೈಗೊಳ್ಳದೇ ಇರುವ ಬಾವಿಗಳ ನೀರನ್ನು ಸೋಸಿ, ನೀರನ್ನು ಕುದಿಸಿ ಬಳಕೆ ಮಾಡಲು ಸೂಚಿಸಲಾಗಿದೆ. ಮಳೆಯ ಆರಂಭದ ದಿನಗಳಲ್ಲಿ ಬಾವಿಯ ನೀರುಗಳು ಕಲುಷಿತಗೊಳ್ಳುವ ಸಾಧ್ಯತೆಗಳು ಇರುತ್ತವೆ. ನೀರಿನ ಪರೀಕ್ಷೆಗಳನ್ನು ಆಗಿಂದಾಗ್ಗೆ ಕೈಗೊಳ್ಳಬೇಕು. ಮಳೆ ನೀರಿನ ಕೊಯ್ಲುಗಳನ್ನು ಅಳವಡಿಸಿಕೊಂಡಲ್ಲಿ ಇವುಗಳ ನಿಯಂತ್ರಣ ಸಾಧ್ಯ.ಇದಕ್ಕೆ ಒತ್ತು ನೀಡಬೇಕು
ಡಾ. ಕೆ. ವಿದ್ಯಾಕುಮಾರಿ (ಜಿಲ್ಲಾಧಿಕಾರಿ )


