ಉಡುಪಿ : ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹೊರಡಿಸಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬೆಟ್ಟು ನಿವಾಸಿ ಭರತ್ ಜಯರಾಮ್ ದಾಸ್ (34) ವಿರುದ್ಧ ಕೋಟ ಹಾಗೂ ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಆತನನ್ನು ಬೆಂಗಳೂರು ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವಂತೆ ಗಡಿಪಾರು ಆದೇಶ ಜಾರಿಗೊಳಿಸಿದ್ದರು.

ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಲಲಿತಾ ಕಣ್ಣೇಗಂಟಿ ಅವರ ಏಕಸದಸ್ಯ ಪೀಠವು ಮಹತ್ವದ ಮಧ್ಯಂತರ ಆದೇಶ ನೀಡಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963ರ ಸೆಕ್ಷನ್ 59ರ ಅನ್ವಯ ಗಡಿಪಾರು ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಆರೋಪಿಗೆ 30 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ಆದರೆ, ಈ ಅವಧಿಯನ್ನು ಪರಿಗಣಿಸದೆ ಆದೇಶ ಹೊರಡಿಸಿದ ದಿನವೇ ಜಾರಿಗೆ ತಂದಿರುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆರೋಪಿಗೆ ಕಾನೂನುಬದ್ಧವಾಗಿ ಮೇಲ್ಮನವಿ ಸಲ್ಲಿಸಲು ಸಮರ್ಪಕ ಅವಕಾಶ ನೀಡದೇ ಗಡಿಪಾರು ಆದೇಶವನ್ನು ತಕ್ಷಣ ಜಾರಿಗೊಳಿಸಿರುವುದು ನ್ಯಾಯಸಮ್ಮತವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದೇ ವೇಳೆ, ಅರ್ಜಿದಾರರು 2026ರ ಜೂನ್ 12ರೊಳಗೆ ಗೃಹ ಇಲಾಖೆಯ ಮುಂದೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅದುವರೆಗೆ ಉಡುಪಿ ಜಿಲ್ಲಾ ಪೊಲೀಸರು ಹೊರಡಿಸಿರುವ ಗಡಿಪಾರು ಆದೇಶ ಜಾರಿಯಲ್ಲಿರಬಾರದು ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ನಿರ್ದೇಶನ ನೀಡಿದೆ.



