ಉಡುಪಿ: ಗಣೇಶೋತ್ಸವ ಕಾರ್ಯಕ್ರಮಗಳಿಗೆ ಜಿಲ್ಲೆಗೊಂದು ರೀತಿಯ ನಿಯಮ, ನಿಬಂಧನೆಗಳನ್ನು ವಿಧಿಸಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಉಡುಪಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ವಿಭಿನ್ನ ಆದೇಶಗಳನ್ನು ನೀಡುತ್ತಿದ್ದಾರೆ. ಚಿತ್ರದುರ್ಗದಲ್ಲಿ ಡಿಜೆ ಬಳಕೆಗೆ ಅನುಮತಿ ಇಲ್ಲ ಎಂದು ಹೇಳಲಾಗುತ್ತಿದೆ. ಟಿ. ನರಸೀಪುರದಲ್ಲಿ ಮಸೀದಿ ಮುಂಭಾಗದಿಂದ ಗಣೇಶ ಮೆರವಣಿಗೆ ಸಾಗಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು. ಟಿ. ನರಸೀಪುರದ ಗಣೇಶ ಮೆರವಣಿಗೆ ವಿಚಾರದಲ್ಲಿ ಪೊಲೀಸ್ ಅಧಿಕಾರಿಯ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಳಿಕ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಪ್ರತಿಭಟನೆಯ ಬಳಿಕ ಅನುಮತಿ ನೀಡಲಾಗಿದೆ.

ಆದರೆ ಇದೇ ವೇಳೆ ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ಅವರ ಕಟೌಟ್ಗಳನ್ನು ಹಾಕಲು ಅವಕಾಶ ನೀಡಲಾಗುತ್ತಿದೆ ಎಂದು ಯತ್ನಾಳ್ ಆರೋಪಿಸಿದರು. ರಾಜ್ಯದ ಗೃಹ ಸಚಿವರ ಜಿಲ್ಲೆಯಲ್ಲಿ 40ರಿಂದ 50 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ಗೆ ಅವಕಾಶ ನೀಡಲಾಗಿದೆ ಎಂದು ಅವರು ದೂರಿದರು. ರಾಜ್ಯ ಸರ್ಕಾರ ಮುಸ್ಲಿಂ ತುಷ್ಟೀಕರಣದೊಂದಿಗೆ ಹಿಂದೂಗಳ ಮೇಲೆ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ ಎಂಬುದು ತಮ್ಮ ಆರೋಪ ಎಂದು ಯತ್ನಾಳ್ ಹೇಳಿದರು. ಗಣೇಶ ಚತುರ್ಥಿಯಂತಹ ಕಾರ್ಯಕ್ರಮಗಳನ್ನು ಆಚರಿಸುವ ಸಂದರ್ಭದಲ್ಲಿ ಕಠಿಣ ನಿಯಮಗಳನ್ನು ವಿಧಿಸಲಾಗುತ್ತಿದೆ. ಆದರೆ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಇದೇ ರೀತಿಯ ನಿರ್ಬಂಧಗಳಿಲ್ಲ ಎಂದು ಅವರು ಟೀಕಿಸಿದರು.

ಟಿ. ನರಸೀಪುರದಲ್ಲಿ ಪ್ರತಿಪಕ್ಷ ನಾಯಕರು ಹಾಗೂ ಸ್ಥಳೀಯರು ಒಗ್ಗಟ್ಟಿನಿಂದ ಹೋರಾಟ ನಡೆಸಿದ ಬಳಿಕ ಪರಿಸ್ಥಿತಿಯಲ್ಲಿ ಬದಲಾವಣೆಯಾಗಿದೆ. ಹಿಂದೂಗಳು ತಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಇಂತಹ ಬೆಳವಣಿಗೆಗಳಿಗೆ ಅವಕಾಶ ಇರುವುದಿಲ್ಲ ಎಂದು ಯತ್ನಾಳ್ ಹೇಳಿದರು.


