ಉಡುಪಿ: ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣವನ್ನು ಫಲಾನುಭವಿಗಳಿಗೆ ನೀಡದೆ ರಾಜ್ಯ ಸರ್ಕಾರ ಮಹಿಳೆಯರಿಗೆ ವಂಚನೆ ಮಾಡಿದೆ ಎಂದು ಆರೋಪಿಸಿದ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಈ ವಿಚಾರದಲ್ಲಿಯೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

ಆಧಾರರಹಿತ ಮತಚೋರಿ ಆರೋಪದ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯಲು ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಮಹಿಳೆಯರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಗೃಹಲಕ್ಷ್ಮೀ ಯೋಜನೆಯ ಹಣ ವಿಳಂಬ ಹಾಗೂ ದುರ್ಬಳಕೆಯ ಆರೋಪಗಳ ವಿರುದ್ಧ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಗೃಹಲಕ್ಷ್ಮೀ ಯೋಜನೆ ಕುರಿತು ತಪ್ಪು ಮಾಹಿತಿ ನೀಡಲಾಗಿದೆ. ಸುಮಾರು 5 ಸಾವಿರ ಕೋಟಿ ರೂ. ದುರ್ಬಳಕೆಯ ಆರೋಪಗಳಿದ್ದರೂ ಮಹಿಳಾ ಕಾಂಗ್ರೆಸ್ ಈ ವಿಚಾರದಲ್ಲಿ ಮೌನ ವಹಿಸಿರುವುದು ಪ್ರಶ್ನಾರ್ಹ ಎಂದು ಟೀಕಿಸಿದ್ದಾರೆ.

ಹೊಸ ವರ್ಷಾಚರಣೆಯ ಸಂದರ್ಭ ಮದ್ಯಪಾನಿಗಳಿಗೆ ಸರ್ಕಾರ ನೀಡಿದ ಬೆಂಬಲದ ಹೇಳಿಕೆಗಳು ದುರದೃಷ್ಟಕರವಾಗಿದ್ದು, ಪಾನನಿಷೇಧದ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧಿಯವರ ತತ್ವಗಳಿಗೆ ವಿರುದ್ಧವಾಗಿದೆ. ಬಿಜೆಪಿಯನ್ನು ಟೀಕಿಸುವುದೇ ಮಹಿಳಾ ಕಾಂಗ್ರೆಸ್ ನಾಯಕರ ಆದ್ಯತೆಯಾಗಿದ್ದು, ಉಡುಪಿ ಜಿಲ್ಲೆಯ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



