ಉಡುಪಿ: ಗೋವಾದ ಕ್ಯಾಲಂಗುಟ್ ಬೀಚ್ ಸಮೀಪದ ಲಾಡ್ಜ್ವೊಂದರಲ್ಲಿ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಂದೀಪ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಅವರು ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಜೂನ್ 30ರ ಸಂಜೆ ಅವರು ತಂಗಿದ್ದ ಲಾಡ್ಜ್ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸಂದೀಪ್ ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿದ್ದಾರೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

ಘಟನೆಯ ವೇಳೆ ಸಂದೀಪ್ ಅವರೊಂದಿಗೆ ಯುವತಿಯೊಬ್ಬಳು ಇದ್ದಳು ಎನ್ನಲಾಗಿದ್ದು, ಅವರ ಸಾವಿನ ಬಳಿಕ ಆಕೆ ಸ್ಥಳದಿಂದ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಮಾಹಿತಿಯನ್ನೂ ಪೊಲೀಸರು ತನಿಖೆಯ ಭಾಗವಾಗಿ ಪರಿಶೀಲಿಸುತ್ತಿದ್ದಾರೆ. ಸಂದೀಪ್ ಸಾಲ್ಯಾನ್ ಅವರು ಕೆಲವು ವರ್ಷಗಳ ಹಿಂದೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಕೆಲಸ ಮಾಡಿದ್ದು, ಇತ್ತೀಚೆಗೆ ಮಲ್ಪೆ ಬೀಚ್ನಲ್ಲಿ ಪ್ರವಾಸಿ ಬೋಟ್ಗಳ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಸ್ನೇಹಪರ ಸ್ವಭಾವ ಹಾಗೂ ಸಮಾಜಸೇವಾ ಚಟುವಟಿಕೆಗಳ ಮೂಲಕ ಪರಿಚಿತರಾಗಿದ್ದ ಸಂದೀಪ್ ಅವರ ಅಕಾಲಿಕ ನಿಧನದ ಸುದ್ದಿ ಮಲ್ಪೆ ಭಾಗದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಸಾವಿನ ಸುತ್ತಮುತ್ತಲಿನ ಪರಿಸ್ಥಿತಿಗಳ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು, ಗೋವಾ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.


