ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಮ್ಮ ನಡಿಗೆ ವಾರ್ಡ್ ಕಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 35 ವಾರ್ಡ್ಗಳಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸದಸ್ಯರು ಮತ್ತು ಅಧಿಕಾರಿಗಳು ಮುಂದಾಗಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.

ಅವರು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ತಾಲೂಕಿನ 16 ಗ್ರಾಮ ಪಂಚಾಯತ್ಗಳಲ್ಲಿ ನಮ್ಮ ನಡಿಗೆ ಪಂಚಾಯತ್ ಕಡೆಗೆ ಕಾರ್ಯಕ್ರಮ ಪೂರ್ಣಗೊಂಡಿದ್ದು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಡೆದಿರುವ ಬಗ್ಗೆ ಪರಿಶೀಲಿಸಲಾಗಿದೆ. ಮುಂದಿನ ದಿನಗಳಲ್ಲಿ ವಾರ್ಡ್ವಾರು ಪರಿಶೀಲನೆ ನಡೆಸಿಯೋಜನೆಗಳ ಅನುಷ್ಠಾನದಲ್ಲಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರುಗಳಾದ ಪ್ರೇಮಲತಾ ಸೋನ್ಸ್, ಅರ್ಚನಾ ದೇವಾಡಿಗ, ಮಾಲತಿ ಬಿ ಆಚಾರ್ಯ, ವೆಂಕಟೇಶ್ ಸುವರ್ಣ, ಉಸ್ತಾದ್ ಸಾದಿಕ್ ತೋನ್ಸೆ,ಸುಧಾಕರ್ ಪೂಜಾರಿ, ಗಣೇಶ್,ಶಬರೀಶ್ ಸುವರ್ಣ, ಸಂತೋಶ್ ಶೆಟ್ಟಿ ಹಾಗೂ ಮತ್ತಿತರ ಸಂಬಂಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಇದುವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಜುಲೈ ತಿಂಗಳಿನವರೆಗೆ ರೂ.1,67,57,30,000 ನಗದು ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಸರಾಸರಿ ಪ್ರತಿ ತಿಂಗಳಿಗೆ 59983 ಫಲಾನುಭವಿಗಳಿಗೆ 36408 ಶೂನ್ಯ ಬಿಲ್ ಬರುತ್ತಿದ್ದು 5,48,23,843 ಕೋಟಿ ರೂ ಅನುದಾನದ ಲಾಭ ಪಡೆಯಲಾಗಿದೆ. ಯುವನಿಧಿ ಯೋಜನೆಯಡಿ 778 ಯುವಕರು ನೋಂದಣಿ ಯಾಗಿದ್ದು 622 ಫಲಾನುಭವಿಗಳಿಗೆ 1,53,37,500 ಅಂದಾಜು ಮೊತ್ತ ಪಾವತಿಸಲಾಗಿದೆ. ಶಕ್ತಿ ಯೋಜನೆಯಡಿ ಅಕ್ಟೋಬರ್ ಮಾಹೆ ವರೆಗೆ 31756767 ವಯಸ್ಕ, 560631 ಮಕ್ಕಳು ಪ್ರಯಾಣಿಸಿದ್ದು 1257128685 ರೂ ಲಾಭ ಪಡೆದಿದ್ದಾರೆ.
ರಮೇಶ್ ಕಾಂಚನ್ ( ಅಧ್ಯಕ್ಷ, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ)



