ಉಡುಪಿ : ರೆಡ್ ಕ್ರಾಸ್ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವ ವಿಶ್ವವ್ಯಾಪಿ ದೊಡ್ಡ ಸಂಸ್ಥೆಯಾಗಿದ್ದು, ಇತರೆ ಸಂಸ್ಥೆಗಳಿಂದ ವಿಭಿನ್ನವಾಗಿ ದೇಶದ ಉದ್ದಗಲಕ್ಕೂ ಜನಪರ ಹಾಗೂ ಜನಹಿತ ಕಾರ್ಯಗಳನ್ನು ನಡೆಸುತ್ತಿದೆ. ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಚೇರ್ಮನ್ ಜಯಕರ ಶೆಟ್ಟಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪ್ರಥಮ ಚಿಕಿತ್ಸೆ ಹಾಗೂ ಆರೋಗ್ಯ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಸೋನಿ ಡಿಕಾಸ್ಟ್ ಅವರು ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಕುರಿತು ಸಮಗ್ರ ಮಾಹಿತಿ ನೀಡಿದರು. ಅಪಘಾತದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಪ್ರಥಮ ಹಂತದ ಕ್ರಮಗಳು, ತಲೆಸುತ್ತಿ ಬಿದ್ದ ವ್ಯಕ್ತಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ, ಕರೆಂಟ್ ಶಾಕ್ ಹೊಡೆದ ವ್ಯಕ್ತಿಗೆ ನೀಡಬೇಕಾದ ತುರ್ತು ಚಿಕಿತ್ಸಾ ಕ್ರಮಗಳ ಕುರಿತು ಪ್ರಾಯೋಗಿಕ ಮತ್ತು ಅರ್ಥಪೂರ್ಣ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಖಜಾಂಚಿ ಶಿವರಾಮ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲ ರಮೇಶ್ ಪೂಜಾರಿ, ಹೆಮ್ಮಾಡಿ ಪ್ರಗತಿ ಮಹಿಳಾ ಬಹುಉದ್ದೇಶ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಕುಲಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಉಪಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕ ಅಲ್ತಾರು ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.



