ಉಡುಪಿ : ಏಳೆಂಟು ವರ್ಷಗಳ ನಿರೀಕ್ಷೆ, ಹೋರಾಟ, ಅನೇಕ ಪ್ರತಿಭಟನೆಗಳ ಬಳಿಕ ಉಡುಪಿ ಇಂದ್ರಾಳಿ ರೈಲ್ವೆ ಸೇತುವೆ ಕೊನೆಗೂ ಸಾರ್ವಜನಿಕ ಬಳಕೆಗೆ ತೆರೆಯಲ್ಪಟ್ಟಿದೆ. ಇತ್ತೀಚೆಗಷ್ಟೆ ಸಚಿವ ಸೋಮಣ್ಣ ಅವರು ಈ ಸೇತುವೆಯನ್ನು ಲೋಕಾರ್ಪಣೆಗೊಳಿಸಿದ್ದರು. ಈ ಸೇತುವೆ ವಿಚಾರವಾಗಿ ತರಹೇವಾರಿ ಹೋರಾಟ ನಡೆಸಿ ಸರಕಾರದ ಗಮನ ಸೆಳೆದವರಲ್ಲಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಓರ್ವರು. ಬುಧವಾರದಂದು ಸೇತುವೆಯ ಉದ್ಘಾಟನೆಯನ್ನು ಉಡುಪಿಯ ಸಾಮಾಜಿಕ ಹೋರಾಟಗಾರ ನಿತ್ಯಾನಂದ ಒಳಕಾಡು ಜಿಲೇಬಿ ಹಂಚುವ ಮೂಲಕ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದರು.

ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಜಿಲೇಬಿ ವಿತರಿಸಿದರು. ಈ ಸಂದರ್ಭದಲ್ಲಿ ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯ ಪಕ್ಕದ ರಸ್ತೆಗಳು ಸರ್ವಿಸ್ ರಸ್ತೆ ರೂಪದಲ್ಲಿ ಅಭಿವೃದ್ಧಿಯಾಗಬೇಕು. ಶಾಲಾ ಮಕ್ಕಳಿಗೆ ರಸ್ತೆ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸಬೇಕು. ರೈಲ್ವೆ ನಿಲ್ದಾಣದ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಇಲಾಖೆ ತಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿದರು.

ವಿಶೇಷ ಸಂಭ್ರಮಾಚರಣೆಯಲ್ಲಿ ಹೊಸ ಸ್ಟೀಲ್ ಬ್ರಿಜ್ ಸಮೀಪ ಉಡುಪಿ ಜಿಲ್ಲಾ ನಾಗರಿಕ ಸಮಿತಿ ವತಿಯಿಂದ 4,500 ಜಿಲೇಬಿಗಳು ಸಾರ್ವಜನಿಕರಿಗೆ ವಿತರಿಸಿದರು. ವಾಹನ ಸವಾರರು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಸಿಹಿ ಸ್ವೀಕರಿಸಿ ಸಂತೋಷ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಹೋರಾಟಗಾರ ನಿತ್ಯಾನಂದ ಒಳಕಾಡು, ಸೇತುವೆ ಕಾಮಗಾರಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಂದರ್ಭಗಳಲ್ಲಿ ಎರಡು-ಮೂರು ಬಾರಿ ಪ್ರತಿಭಟನೆ ನಡೆಸಿ, ಕೇಂದ್ರ ಹೆದ್ದಾರಿ ಮತ್ತು ರೈಲ್ವೆ ಇಲಾಖೆಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕಾಮಗಾರಿ ಪೂರ್ಣಗೊಂಡು ಸಂಚಾರ ಪ್ರಾರಂಭವಾದ ಹಿನ್ನೆಲೆಯಲ್ಲಿ ಅವರು ಜನರ ಹೋರಾಟ ಫಲ ನೀಡಿದೆ ಎಂದು ಸಂತೋಷ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ನಾಗರಿಕ ಸಮಿತಿ ಸದಸ್ಯರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಹೊಸ ಸೇತುವೆ ಉದ್ಘಾಟನೆಗೆ ಹರ್ಷ ವ್ಯಕ್ತಪಡಿಸಿದರು.



