ಬ್ರಹ್ಮಾವರ : ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಮಕ್ಕಳಿಗೆ ವ್ಯವಹಾರ ಮತ್ತು ಹಣಕಾಸು ಜ್ಞಾನದ ಅರಿವು ಮೂಡಿಸುವ ಉದ್ದೇಶದಿಂದ ಚಿಣ್ಣರ ಸಂತೆಯನ್ನು ಆಯೋಜಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ದಿನಗಳಲ್ಲಿ ವ್ಯವಹಾರದಲ್ಲಿ ಮೋಸ ಹೆಚ್ಚಾಗುತ್ತಿರುವ ಹಿನ್ನೆಲೆ ಮಕ್ಕಳಿಗೆ ಎಳೆಯ ವಯಸ್ಸಿನಲ್ಲೇ ಕೊಡು-ಕೊಳ್ಳುವ ಅರಿವು ಅಗತ್ಯವಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಲ್ಲಿ ವ್ಯಾವಹಾರಿಕ ಜ್ಞಾನ ಬೆಳೆಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಮಾತನಾಡಿ, ಹಣ ಸಂಪಾದನೆಯ ಜೊತೆಗೆ ಅದನ್ನು ಸಮರ್ಪಕವಾಗಿ ಬಳಸುವ ತಿಳುವಳಿಕೆ ಮಕ್ಕಳಿಗೆ ಇರಬೇಕು. ಉತ್ತಮ ಸೇವೆ ಮತ್ತು ಗ್ರಾಹಕರ ತೃಪ್ತಿಯೇ ಯಶಸ್ವಿ ವ್ಯವಹಾರದ ಮೂಲ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಿ-ನರ್ಸರಿ, ಎಲ್.ಕೆ.ಜಿ ಹಾಗೂ ಯು.ಕೆ.ಜಿ ವಿದ್ಯಾರ್ಥಿಗಳು ತಾವು ತಯಾರಿಸಿದ ವಸ್ತುಗಳನ್ನು ಪ್ರದರ್ಶಿಸಿ, ಪೋಷಕರೊಂದಿಗೆ ಖರೀದಿ-ಮಾರಾಟದ ಪ್ರಾಯೋಗಿಕ ಅನುಭವ ಪಡೆದರು. ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



