ಬೈಂದೂರು : ತಾಲೂಕು ಆಸ್ಪತ್ರೆಗಳಲ್ಲಿ ಎನ್ಎಚ್ಎಂ ಕಾರ್ಯಕ್ರಮದಡಿ ನೇಮಕಗೊಂಡಿರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಕಡಿತಗೊಳಿಸಲು ಆದೇಶ ಮಾಡಿರುವುದನ್ನು ಸರ್ಕಾರ ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹಿಸಿದ್ದಾರೆ.
ಸರಕಾರಿ ಆಸ್ಪತ್ರೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಳ್ಳುವ ಹಂತದಲ್ಲಿರುವಾಗ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಕಡಿತ ಮಾಡಿದರ ಸರಕಾರಿ ಆಸ್ಪತ್ರೆಗಳನ್ನೇ ಮುಚ್ಚಬೇಕಾದ ಪರಿಸ್ಥಿತಿ ಬರಬಹುದು. ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ಗಳು ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು. ಇದರಿಂದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ದಿನದ ಎಲ್ಲಾ ಸಮಯದಲ್ಲೂ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗುತ್ತಿತ್ತು. ಆದರೆ ಸರಕಾರ ಪ್ರಸ್ತುತ ಹೊರಡಿಸಿರುವ ಆದೇಶದಿಂದಾಗಿ ಈ ಸಿಬ್ಬಂದಿಗಳನ್ನು ಕೈಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇದರಿಂದ ಮೊದಲೇ ಸಿಬ್ಬಂದಿ ಕೊರತೆಯಿಂದ ನಲುಗಿರುವ ತಾಲೂಕು ಆಸ್ಪತ್ರೆಗಳಿಗೆ ಕೊಡಲಿ ಪೆಟ್ಟು ನೀಡಿದಂತೆ ಆಗಿದೆ. ಇದು ಸರಿಯಾದ ಕ್ರಮವಲ್ಲ ಎಂದು ಸರಕಾರದ ಕ್ರಮದ ಕುರಿತು ಶಾಸಕರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ತಾಲೂಕು ಆಸ್ಪತ್ರೆಗಳಿಗೆ ಎನ್ಎಚ್ಎಂ ನಡಿ ಮಂಜೂರಾದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಕೈಬಿಡದೆ, ಹುದ್ದೆಗಳನ್ನು ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವರಿಗೆ ಹಾಗೂ ಸರಕಾರಕ್ಕೆ ಗಂಟಿಹೊಳೆ ಆಗ್ರಹಿಸಿದ್ದಾರೆ.