ಉಡುಪಿ : ವರನಟ ಡಾ. ರಾಜ್ ಕುಮಾರ್ ಅವರ ಮೇರುವ್ಯಕ್ತಿತ್ವ, ಕನ್ನಡಾಭಿಮಾನ, ಭಾಷಾಪ್ರೇಮ ಹಾಗೂ ಸಮಾಜಮುಖಿ ಕಾರ್ಯಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ ಅವರು ಇಂದು ನಗರದ ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವರನಟ ಡಾ.ರಾಜ್ ಕುಮಾರ್ ರವರ 97 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಡಾ. ರಾಜ್ ಕುಮಾರ್ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರೂ ಸಹ ರಾಜಕೀಯದಲ್ಲಿ ಭಾಗವಹಿಸದೇ, ಚಿತ್ರರಂಗ ಎಂಬ ಒಂದೇ ಕ್ಷೇತ್ರವನ್ನು ಆಯ್ಕೆಮಾಡಿಕೊಂಡು, ಇದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಪೂರ್ಣ ಪರಿಶ್ರಮ ವಹಿಸಿ, ಯಶಸ್ಸು ಸಾಧಿಸಿದ್ದಾರೆ. ಅದೇ ನಿಟ್ಟಿನಲ್ಲಿ ಯುವಪೀಳಿಗೆಯು ಸಹ ಜೀನವದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡುವುದುರೊಂದಿಗೆ ಕುಟುಂಬಕ್ಕೆ, ಸಮಾಜಕ್ಕೆ, ಸುತ್ತಮುತ್ತಲಿನ ಪರಿಸರಕ್ಕೆ ಕೊಡುಗೆ ನೀಡುವಂತಾಗಬೇಕು. ಜೀವನವೇ ಒಂದು ನಾಟಕವಿದ್ದಂತೆ. ಅದರಲ್ಲಿ ನಾವು ಕಲಾವಿದರುಗಳು. ಜೀವನದ ನಾಟಕದಲ್ಲಿ ನಮ್ಮ ನಮ್ಮ ಪಾತ್ರಗಳನ್ನು ಮುಂದಾಳತ್ವ ವಹಿಸಿ, ಉತ್ತಮವಾಗಿ ನಿರ್ವಹಿಸಿದಾಗ ಮಾತ್ರ ಸುಂದರ ಭವಿಷ್ಯ ಕಟ್ಟಿಕೊಳ್ಳು ಸಾಧ್ಯ. ಈ ನಿಟ್ಟಿನಲ್ಲಿ ಯುವಪೀಳಿಗೆ ಹೆಜ್ಜೆ ಇಡಬೇಕು ಎಂದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಬಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಡಾ. ರಾಜ್ ಕುಮಾರ್ ಅವರು, ಕನ್ನಡ ಚಿತ್ರರಂಗದಲ್ಲಿ ಸುಮಾರು 5 ದಶಕಗಳ ಕಾಲ ನಟನೆಯನ್ನು ಮಾಡಿದ್ದು, 220 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಎತ್ತಿ ಹಿಡಿದವರಲ್ಲಿ ಇವರ ಕೊಡುಗೆ ಅಪಾರವಾಗಿದೆ ಎಂದರು. ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಭವ್ಯಾ ನಾಗರಾಜ್ ಉಪನ್ಯಾಸ ನೀಡಿ ಮಾತನಾಡುತ್ತಾ, ಆಡುಮುಟ್ಟದ ಸೊಪ್ಪಿಲ್ಲ, ಡಾ. ರಾಜ್ ಕುಮಾರ್ ನಿರ್ವಹಿಸದ ಪಾತ್ರಗಳಿಲ್ಲ. ಎಂಬಂತೆ ನಟನೆ, ಗಾಯನ, ಚಿತ್ರನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡ ಅವರು, ಕನ್ನಡಚಿತ್ರರಂಗವನ್ನು ಉತ್ತುಂಗ ಶಿಖರಕ್ಕೆ ಏರಿಸಿದ ಖ್ಯಾತಿ ಮೇರುನಟ ಡಾ. ರಾಜ್ ಕುಮಾರ್ ಅವರಿಗೆ ಸಲ್ಲುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಪ್ರಸಾದ್ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾಗ್ಯಲಕ್ಷ್ಮೀ ಉಪ್ಪೂರು ಹಾಗೂ ರೋಹಿತ್ ಮಲ್ಪೆ ಇವರಿಂದ ಡಾ. ರಾಜ್ಕುಮಾರ್ ಗೀತ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದದವರು, ವಿದ್ಯಾರ್ಥಿನಿಯರು, ವಾರ್ತಾ ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಗಳಾದ ದಿಯಾ, ದಿಶಾ ಹಾಗೂ ಶ್ರೀಪದ ನಾಡಗೀತೆ ಹಾಡಿದರು, ಕಾಲೇಜಿನ ಪ್ರೊ. ಡಾ. ರಾಜೇಂದ್ರ ಕೆ ನಿರೂಪಿಸಿದರೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮತ್ತು ಕಲಾನಿಕಾಯ ಡೀನ್ ಪ್ರೊ. ನಿಕೇತನ ವಂದಿಸಿದರು.

ಪ್ರೌಢಶಾಲೆ ಹಂತದವರೆಗೆ ಕನ್ನಡ ಪ್ರಥಮ ಭಾಷೆಯಾಗಿ ಕಡ್ಡಾಯ ಮಾಡಬೇಕು ಎಂಬ ವಿ.ಕೃ ಗೋಕಾಕ್ ವರದಿಯ ಜಾರಿಗೆ ಸರ್ಕಾರ ಹಿಂದೇಟು ಹಾಕಿದಾಗ, ಅಂತಹ ಸಂದರ್ಭದಲ್ಲಿ ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿ ಡಾ ರಾಜ್ ಕುಮಾರ್, ಚಿತ್ರೋದ್ಯಮ, ಜನಸಾಮಾನ್ಯರನ್ನು ಚಳುವಳಿಯಲ್ಲಿ ಒಟ್ಟುಗೂಡಿಸುವ ಮೂಲಕ ಸಮುದಾಯದ ನಾಯಕರಾದರು. ರಾಜಕೀಯದಿಂದ ಅಂತರ ಕಾಯ್ದುಕೊಂಡು ಬಂದ ಇವರು, ವಿನಯವಂತರೂ, ಸದ್ಗುಣಿಗಳೂ ಆಗಿದ್ದರು. ತಮ್ಮ 78 ನೇ ವಯಸ್ಸಿನಲ್ಲಿ ತೀರಿಕೊಂಡರೂ ಸಹ ಇಂದಿಗೂ ತಮ್ಮ ನಟನೆಯ ಮೂಲಕ ಪ್ರತಿಯೊಬ್ಬ ಸಿನಿಪ್ರಿಯರಲ್ಲೂ ಜೀವಂತರಾಗಿದ್ದಾರೆ.
ಭವ್ಯಾ ನಾಗರಾಜ್ (ಉಪನ್ಯಾಸಕಿ)