ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಹಾಗೂ ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆ (ಯುನಿಟ್ ಆಫ್ ಡಾ. ಎ.ವಿ ಬಾಳಿಗಾ ಚಾರಿಟೀಸ್) ದೊಡ್ಡಣಗುಡ್ಡೆ, ಉಡುಪಿ – ಈ ಎನ್.ಜಿ.ಒ ಸಂಸ್ಥೆ ನಡೆಸುವ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರದ ಉದ್ಘಾಟನಾ ಸಮಾರಂಭವು ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಕೆ.ಎಂ.ಸಿ ಮಣಿಪಾಲ ಮನೋರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ವಿ.ಎನ್ ಶರ್ಮಾ ಮಾತನಾಡಿ, ಈ ಕೇಂದ್ರವು 10 ಹಾಸಿಗೆಗಳನ್ನು ಹೊಂದಿದ್ದು, ಮಾನಸಿಕ ಅಸ್ವಸ್ಥರಿಗೆ ಮತ್ತು ನಿರಾಶ್ರಿತರಿಗೆ ಆಸ್ಪತ್ರೆ ಆಧಾರಿತ ಬಹು ಶಿಸ್ತಿನ ಸೇವೆಗಳನ್ನು ಒದಗಿಸುವುದು ಈ ಕೇಂದ್ರದ ಉದ್ದೇಶವಾಗಿದೆ ಎಂದರು.

ಜಿಲ್ಲಾ ಸರ್ಜನ್ ಡಾ.ಅಶೋಕ್.ಹೆಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ. ಬಸವರಾಜ ಜಿ.ಹುಬ್ಬಳ್ಳಿ, ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಲತಾ ನಾಯಕ್, ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



