ಉಡುಪಿ: ತೆಕ್ಕಟ್ಟೆ ಆನ್ಲೈನ್ ಸರ್ವಿಸ್ ಸೆಂಟರ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಆನ್ಲೈನ್ ಸರ್ವಿಸ್ ಸೆಂಟರ್ ಒಂದು ಸಂಪೂರ್ಣವಾಗಿ ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ಕಣ್ಣುಕೆರೆ ಸಮೀಪ ಇರುವ ಆಶ್ಲೇಷ ಆನ್ಲೈನ್ ಸರ್ವಿಸ್ ಸೆಂಟರ್ನಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಫಣಿರಾಜ್ ಅವರು ರಾತ್ರಿ ಸುಮಾರು 10 ಗಂಟೆಗೆ ಅಂಗಡಿಯನ್ನು ಮುಚ್ಚಿ ಮನೆಗೆ ತೆರಳಿದ ಬಳಿಕ, ಅಂಗಡಿಯೊಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ.

ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಂಗಡಿಯಲ್ಲಿದ್ದ ಕಂಪ್ಯೂಟರ್ಗಳು, ಪ್ರಿಂಟರ್ಗಳು, ಸ್ಟೇಷನರಿ ಸಾಮಗ್ರಿಗಳು, ಇನ್ವರ್ಟರ್, ಬ್ಯಾಟರಿಗಳು, ಕುರ್ಚಿ–ಟೇಬಲ್ ಸೇರಿದಂತೆ ಬಹುತೇಕ ಎಲ್ಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆಗೆ ಅಂಗಡಿಯ ಒಳಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯ ಯುವಕರು ಧಾವಿಸಿ ಪ್ರಾಥಮಿಕವಾಗಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಮಾಹಿತಿ ಪಡೆದ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು.

ಅಗ್ನಿ ದುರಂತದಲ್ಲಿ ಸುಮಾರು 6 ಲಕ್ಷ ರೂಪಾಯಿ ಗೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿರಬಹುದು ಎಂದು ಅಂದಾಜು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



