ಉಡುಪಿ: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳು ಮಾರಾಟವಾಗುತ್ತಿವೆ ಎಂಬ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಬಗ್ಗೆ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಲಭ್ಯವಾದ ಮಾಹಿತಿಯನ್ನು ಪರಿಶೀಲಿಸಿದಾಗ ಯಾವುದೇ ಪೂರಕ ಪುರಾವೆಗಳು ದೊರಕಿಲ್ಲ. ಇದು ಸಂಪೂರ್ಣವಾಗಿ ತಪ್ಪು ಮಾಹಿತಿ ಆಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಹುನ್ನಾರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಳು ಸುದ್ದಿ ಹರಡುವವರನ್ನು ಗುರುತಿಸಿ ಅವರ ವಿರುದ್ಧ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು, ಪಾಲಕರು ಹಾಗೂ ಪೋಷಕರು ಇಂತಹ ವದಂತಿಗಳಿಗೆ ಮಹತ್ವ ನೀಡದೆ, ತಮ್ಮ ಮಕ್ಕಳನ್ನು ಏಕಾಗ್ರತೆಯಿಂದ ಪರೀಕ್ಷಾ ಸಿದ್ಧತೆಗೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಮಂಡಳಿಯ ಅಧಿಕೃತ ಜಾಲತಾಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಅಗತ್ಯವಿರುವ ಸಮಗ್ರ ಮಾಹಿತಿಯನ್ನು ‘ವಿದ್ಯಾರ್ಥಿಗಳ ಅಂಕಣ’ದಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಈ ಮಾಹಿತಿಯನ್ನು ಸದುಪಯೋಗಪಡಿಸಿಕೊಂಡು, ಸುಳ್ಳು ಸುದ್ದಿಗಳ ಆಮಿಷಗಳಿಗೆ ಒಳಗಾಗಿ ಮೋಸ ಹೋಗಬಾರದು ಎಂದು ಉಪನಿರ್ದೇಶಕರು ಕೋರಿದ್ದಾರೆ.



